ನವದೆಹಲಿ: ಕೋವಿಡ್-19 ಹೊಸ ಪ್ರಕರಣಗಳು ಹೆಚ್ಚು ಪತ್ತೆಯಾಗಿರುವ 10 ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯವು ತಜ್ಞರ ತಂಡವನ್ನು ಕಳುಹಿಸಿದೆ. ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಮಟ್ಟದ ಮೂವರು ಅಧಿಕಾರಿಗಳು ಈ ತಂಡದಲ್ಲಿ ಇದ್ದಾರೆ.
ಪ್ರತಿದಿನ ಪತ್ತೆಯಾಗುತ್ತಿರುವ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣಿಸಿಕೊಂಡಿರುವ →ಮಹಾರಾಷ್ಟ್ರ, ಕೇರಳ, ಛತ್ತೀಸಗಡ, ಮಧ್ಯಪ್ರದೇಶ, ಗುಜರಾತ್, ಪಂಜಾಬ್, ಕರ್ನಾಟಕ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಹಾಗೂ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಈ ತಂಡಗಳನ್ನು ನಿಯೋಜನೆ ಮಾಡಲಾಗಿದೆ.
‘ಆಯಾ ರಾಜ್ಯಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆ ಆಗಲು ಏನು ಕಾರಣ ಎಂಬುದನ್ನು ಪತ್ತೆ ಮಾಡಲು ಈ ತಂಡಗಳು ಪ್ರಯತ್ನಿಸಲಿವೆ. ಆಯಾ ರಾಜ್ಯಗಳ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತಗಳ ಜತೆಯಲ್ಲಿ ಈ ತಂಡಗಳು ಕೆಲಸ ಮಾಡಲಿವೆ. ಹೊಸ ಅಲೆಯಲ್ಲಿ ಕೋವಿಡ್-19 ಹರಡುವಿಕೆಯ ಸರಪಳಿಯನ್ನು ತುಂಡರಿಸುವುದು ಹೇಗೆ ಎಂಬ ಕಾರ್ಯಯೋಜನೆಯನ್ನು ರೂಪಿಸಲು ಈ ತಂಡಗಳು ಪ್ರಯತ್ನಿಸಲಿವೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ.
ರಾಜ್ಯಗಳಿಗೆ ಪತ್ರ: ಕೋವಿಡ್ ನಿಯಂತ್ರಣ ಕಾರ್ಯಯೋಜನೆಯ ಅನುಷ್ಠಾನವನ್ನು ಕಡೆಗಣಿಸಿವೆ ಎನ್ನಲಾದ ರಾಜ್ಯಗಳಿಗೆ ಆರೋಗ್ಯ ಸಚಿವಾಲಯವು ಪತ್ರ ಬರೆದಿದೆ.
‘ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ರಾಜ್ಯಗಳಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆ ಕಡಿಮೆಯಾಗಿರುವುದು ಗಮನಕ್ಕೆ ಬಂದಿದೆ. ಹೀಗೆ ಆದರೆ, ಕೋವಿಡ್ ಲಾಕ್ಡೌನ್ನಿಂದ ಸಾಧಿಸಿದ ನಿಯಂತ್ರಣ
ವನ್ನು ಕಳೆದುಕೊಳ್ಳಬೇಕಾಗುತ್ತದೆ. ಆರ್ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆಯನ್ನು ಗಣನೀಯ ಪ್ರಮಾಣದಲ್ಲಿ ಏರಿಕೆ ಮಾಡಬೇಕು. ಪತ್ತೆಯಾಗದೇ ಉಳಿದಿರುವ ಪ್ರಕರಣಗಳನ್ನು ಪತ್ತೆ ಮಾಡಬೇಕು’ ಎಂದು ಆರೋಗ್ಯ ಸಚಿವಾಲಯವು ಪತ್ರದಲ್ಲಿ ಸೂಚನೆ ನೀಡಿದೆ. ಮಹಾರಾಷ್ಟ್ರ, ಕೇರಳ, ಛತ್ತೀಸಗಡ, ಮಧ್ಯಪ್ರದೇಶ, ಗುಜರಾತ್, ಪಂಜಾಬ್ ಮತ್ತು ಜಮ್ಮು-ಕಾಶ್ಮೀರಕ್ಕೆ ಈ ಪತ್ರ ಬರೆಯಲಾಗಿದೆ.
60ರ ಮೇಲ್ಪಟ್ಟವರಿಗೆ ಮಾರ್ಚ್ 1ರಿಂದ ಲಸಿಕೆ
ಎರಡನೇ ಹಂತದ ಕೋವಿಡ್ ಲಸಿಕೆ ಕಾರ್ಯಕ್ರಮವು ಮಾರ್ಚ್ 1ರಿಂದ ಆರಂಭವಾಗಲಿದೆ. ಈ ಬಾರಿ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ.
* ಈ ಹಂತದಲ್ಲಿ 60 ವರ್ಷ ಮೇಲ್ಪಟ್ಟ 10 ಕೋಟಿ ಜನರಿಗೆ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿದೆ
* 45 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಅಂದಾಜು 17 ಕೋಟಿ ಜನರಿಗೆ ಈ ಹಂತದಲ್ಲಿ ಲಸಿಕೆ ನೀಡಲು ಉದ್ದೇಶಿಸಲಾಗಿದೆ
* ಈ ಹಂತದಲ್ಲಿ 10,000 ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಹಾಕಲಾಗುತ್ತದೆ
*20,000 ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ಹಾಕಲಾಗುತ್ತದೆ. ಆದರೆ, ಇದಕ್ಕೆ ಶುಲ್ಕ ಪಾವತಿ ಮಾಡಬೇಕು
* ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳಲು
ಶುಲ್ಕದ ಮೊತ್ತವನ್ನು ಒಂದೆರಡು ದಿನಗಳಲ್ಲಿ ಘೋಷಿಸಲಾಗುತ್ತದೆ
* ಯಾವೆಲ್ಲ ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರು ಲಸಿಕೆಗೆ ಅರ್ಹರು ಎಂಬುದನ್ನು ಮುಂದೆ ಪ್ರಕಟಿಸಲಾಗುವುದು
ರಾಜ್ಯಗಳಿಗೆ ಸೂಚನೆ
* ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿರುವ ಜಿಲ್ಲೆಗಳತ್ತ ಹೆಚ್ಚು ಗಮನ ನೀಡಬೇಕು. ಅಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಬೇಕು
*ರ್ಯಾಪಿಡ್ ಟೆಸ್ಟ್ನಲ್ಲಿ ನೆಗೆಟಿವ್ ಬಂದಿರುವ, ಆದರೆ ಕೋವಿಡ್ ಲಕ್ಷಣಗಳಿರುವ ಎಲ್ಲರನ್ನೂ ಕಡ್ಡಾಯವಾಗಿ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು
*ಕೋವಿಡ್ ಪಾಸಿಟಿವ್ ಇರುವ ಎಲ್ಲರನ್ನೂ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಇರಿಸಬೇಕು. ಅವರ ಸಂಪರ್ಕಕ್ಕೆ ಬಂದಿದ್ದವರನ್ನು ಪತ್ತೆಮಾಡಿ, ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು
*ಕೇಂದ್ರದ ತಜ್ಞರ ತಂಡಗಳು ಕ್ಷೇತ್ರಾಧ್ಯಯನ ನಡೆಸಲಿವೆ. ಈ ತಂಡಗಳಿಗೆ ಅಗತ್ಯ ಸಹಕಾರ ನೀಡಬೇಕು
*ಕೇಂದ್ರದ ತಜ್ಞರ ತಂಡಗಳು ತಮ್ಮ ಭೇಟಿಯ ಅಂತ್ಯದಲ್ಲಿ ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಜತೆ ಕಡ್ಡಾಯವಾಗಿ ಸಭೆ ನಡೆಸಲಿವೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.