ತಿರುವನಂತಪುರ : ಕೇರಳದ ಆಡಳಿತಾರೂಢ ಎಲ್ಡಿಎಫ್ ಮೈತ್ರಿಕೂಟದ ಎರಡನೇ ದೊಡ್ಡ ಪಕ್ಷ ಎನಿಸಿರುವ ಸಿಪಿಐ, ಮುಂಬರುವ ಲೋಕಸಭಾ ಚುನಾವಣೆಗೆ ನಾಲ್ಕು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರತಿನಿಧಿಸುತ್ತಿರುವ ವಯನಾಡು ಕ್ಷೇತ್ರದಲ್ಲಿ ಹಿರಿಯ ನಾಯಕಿ ಆನಿ ರಾಜಾ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಸಿಪಿಐ ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಅವರ ಪತ್ನಿ ಆನಿ, ಸಿಪಿಐ ಮಹಿಳಾ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಇನ್ನೊಬ್ಬ ಹಿರಿಯ ನಾಯಕ ಮತ್ತು ಮಾಜಿ ಸಂಸದ ಪಣ್ಯನ್ ರವೀಂದ್ರನ್ ಅವರು ತಿರುವಂತಪುರ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ. ಈ ಕ್ಷೇತ್ರವನ್ನು ಕಾಂಗ್ರೆಸ್ನ ಶಶಿ ತರೂರ್ ಪ್ರತಿನಿಧಿಸುತ್ತಿದ್ದಾರೆ.
ಮಾಜಿ ಕೃಷಿ ಸಚಿವ ವಿ.ಎಸ್.ಸುನಿಲ್ ಕುಮಾರ್ ಮತ್ತು ಪಕ್ಷದ ಯೂತ್ ವಿಂಗ್ ಎಐವೈಎಫ್ನ ನಾಯಕ ಸಿ.ಎ.ಅರುಣ್ಕುಮಾರ್ ಅವರು ಕ್ರಮವಾಗಿ ತ್ರಿಶ್ಯೂರ್ ಹಾಗೂ ಮಾವೇಲಿಕ್ಕರ ಕ್ಷೇತ್ರದಿಂದ ಸ್ಪರ್ಧಿಸುವರು ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೊಯ್ ವಿಶ್ವಮ್ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.