ನವದೆಹಲಿ: ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿರುವ ಕರ್ನಾಟಕ ಸರ್ಕಾರ, ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕ್ಗಳ ಮೂಲಕರೈತರಿಗೆ ವಿತರಿಸಲಾಗಿರುವ ಶೇ 50ರಷ್ಟು ಸಾಲವನ್ನು ಮನ್ನಾ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಿದೆ.
ಕೃಷಿ ಸಾಲ ಮನ್ನಾ ಮಾಡುವಂತೆ ಕೋರಿ ವಿವಿಧ ರಾಜ್ಯ ಸರ್ಕಾರಗಳು ಪ್ರಸ್ತಾವನೆ ಸಲ್ಲಿಸಿವೆ. ಕರ್ನಾಟಕ ಸರ್ಕಾರ ಶೇ 50ರಷ್ಟು ಸಾಲ ಮನ್ನಾಗೆ ಮನವಿ ಮಾಡಿದೆ ಎಂದು ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವ ಶಿವಪ್ರತಾಪ ಶುಕ್ಲಾ ಮಂಗಳವಾರ ರಾಜ್ಯಸಭೆಗೆ ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದರೆ, ಸಾಲ ಮನ್ನಾ ಕೋರಿ ಸಲ್ಲಿಸಲಾದ ಯಾವುದೇ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರ ಪರಿಗಣಿಸಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಜೆಡಿಎಸ್– ಕಾಂಗ್ರೆಸ್ ಮೈತ್ರಿ ಸರ್ಕಾರವು ರಾಜ್ಯದ 43 ಲಕ್ಷ ರೈತರ ₹ 44,000 ಕೋಟಿ ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿತ್ತು. ಇದರಲ್ಲಿ ರೈತರು ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕ್ಗಳಲ್ಲಿ ಪಡೆದ ಸಾಲ ಸೇರಿದೆ.