ಛತ್ರಪತಿ ಸಂಭಾಜಿನಗರ: ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಮಹಾರಾಷ್ಟ್ರದಲ್ಲಿ ಹಿಂಸಾಚಾರಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಧರಾಶಿವ್ ಮತ್ತು ಬೀಡ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಿ ಸ್ಥಳೀಯ ಆಡಳಿತ ಆದೇಶ ಹೊರಡಿಸಿದೆ.
ಮುಂದಿನ ಆದೇಶದವರೆಗೆ ನಿಷೇಧಾಜ್ಞೆ (144 ಸೆಕ್ಷನ್) ಜಾರಿಯಲ್ಲಿರಲಿದ್ದು, ಐದಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ ಎಂದು ಆದೇಶಿಸಲಾಗಿದೆ. ಅಲ್ಲದೆ ಮಧ್ಯ ಮಹಾರಾಷ್ಟ್ರ ಭಾಗಗಳಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ನಿಷೇಧಾಜ್ಞೆ ಇರುವ ಕಾರಣ ಶಾಲಾ– ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಹಾಲು, ಔಷಧ ಅಂಗಡಿ. ಸರ್ಕಾರಿ ಕಚೇರಿ, ಬ್ಯಾಂಕ್, ಆಸ್ಪತ್ರೆ ಹಾಗೂ ಸಾರ್ವಜನಿಕ ಸಾರಿಗೆ ಹೊರತುಪಡಿಸಿ ಉಳಿದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಆದೇಶಿಸಲಾಗಿದೆ.
ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಿಲ್ಲೆಯ ವಿವಿಧೆಡೆ ಧರಣಿ, ಉಪವಾಸ ಸತ್ಯಾಗ್ರಹಗಳು ನಡೆಯುತ್ತಿವೆ. ನಿನ್ನೆ (ಸೋಮವಾರ) ನಡೆದ ಗಲಾಟೆಯಲ್ಲಿ ಕರ್ನಾಟಕಕ್ಕೆ ಸೇರಿದ ಕೆಕೆಆರ್ಟಿಸಿ ಬಸ್ಗೆ ಬೆಂಕಿ ಹಂಚಲಾಗಿತ್ತು.
ಜತೆಗೆ ಪ್ರತಿಭಟನಕಾರರು ಎನ್ಸಿಪಿ ಶಾಸಕ ಪ್ರಕಾಶ್ ಸೋಲಂಕಿ ನಿವಾಸ ಮತ್ತು ಮಾಜಲಗಾವ್ ಪುರಸಭೆ ಕಟ್ಟಡದ ಮೇಲೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದರು.