ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ.
ಚೆನ್ನೈ ವಿಮಾನನಿಲ್ದಾಣ ರನ್ವೇ ಜಲಾವೃತಗೊಂಡಿದ್ದರಿಂದ ಅಧಿಕಾರಿಗಳು 70 ವಿಮಾನಗಳ ಯಾನ ರದ್ದುಪಡಿಸಿದ್ದರು. ರೈಲು, ಬಸ್ಸುಗಳ ಸಂಚಾರವೂ ವಿಳಂಬ ಅಥವಾ ರದ್ದತಿ ಕಾರಣದಿಂದಾಗಿ ವ್ಯತ್ಯಯಗೊಂಡಿತ್ತು. ಕೊಯಮತ್ತೂರು, ಮೈಸೂರು ಕಡೆಗೆ ತೆರಳಬೇಕಿದ್ದ ರೈಲುಗಳ ಸಂಚಾರ ರದ್ದಾಗಿದೆ ಎಂದು ರೈಲ್ವೆ ಇಲಾಖೆಯು ತಿಳಿಸಿತ್ತು. ಅಲ್ಲದೆ, ಚೆನ್ನೈನಲ್ಲಿ 14 ಸಬ್ವೇಗಳು ಜಲಾವೃತವಾಗಿದ್ದು, ಸಂಚಾರ ಸ್ಥಗಿತವಾಗಿತ್ತು.
ರಜೆ ಘೋಷಣೆ: ತಮಿಳುನಾಡು ಸರ್ಕಾರ, ಚೆನ್ನೈ ಹಾಗೂ ತಿರುವಲ್ಲೂರು, ಕಾಂಚೀಪುರಂ, ಚೆಂಗಲಪಟ್ಟು ಜಿಲ್ಲೆಗಳಲ್ಲಿ ಇಂದು ರಜೆ ಘೋಷಿಸಿದೆ. ಅಗ್ನಿಶಾಮಕ ಸೇವೆ, ಆಸ್ಪತ್ರೆ, ಪೆಟ್ರೋಲ್ ಬಂಕ್, ಹೋಟೆಲ್ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದೆ.