ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ: ವಿಚಾರಣೆ ಮುಂದೂಡಿದ ನ್ಯಾಯಾಲಯ

Published 20 ಜನವರಿ 2024, 10:13 IST
Last Updated 20 ಜನವರಿ 2024, 10:13 IST
ಅಕ್ಷರ ಗಾತ್ರ

ಥಾಣೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಥಾಣೆ ಜಿಲ್ಲೆಯ ನ್ಯಾಯಾಲಯವು ಶನಿವಾರ ಮಾರ್ಚ್ 16ಕ್ಕೆ ಮುಂದೂಡಿದೆ.

`ಭಾರತ್ ಜೋಡೊ ನ್ಯಾಯ ಯಾತ್ರೆ'ಯಲ್ಲಿ ನಿರತರಾಗಿರುವ ಕಾರಣ ವಿಚಾರಣೆಯನ್ನು ಮುಂದೂಡುವಂತೆ ರಾಹುಲ್‌ ಗಾಂಧಿ ಕೋರಿದ್ದರು. ಭಿವಂಡಿ ನ್ಯಾಯಾಲಯದ ನ್ಯಾಯಾಧೀಶ ಎಲ್‌.ಸಿ ವಾಡಿಕರ್ ಅವರು ಮನವಿಯನ್ನು ಸ್ವೀಕರಿಸಿ ವಿಚಾರಣೆಯನ್ನು ಮುಂದೂಡಿದರು ಎಂದು ಅವರ ಪರ ವಕೀಲ ನಾರಾಯಣ ಅಯ್ಯರ್ ತಿಳಿಸಿದರು ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜನವರಿ 14ರಂದು ಮಣಿಪುರದಲ್ಲಿ ಆರಂಭವಾದ ಭಾರತ್ ಜೋಡೊ ನ್ಯಾಯ ಯಾತ್ರೆ ಮಾರ್ಚ್ 20ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳುವ ಸಾಧ್ಯತೆಯಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

2014ರ ಮಾರ್ಚ್ 6ರಂದು ಭಿವಂಡಿ ಬಳಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿ ಸ್ಥಳೀಯ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯ ರಾಜೇಶ್ ಕುಂಟೆ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

ಆರ್‌ಎಸ್‌ಎಸ್‌ನವರು ಮಹಾತ್ಮ ಗಾಂಧಿಯನ್ನು ಕೊಂದಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡುವ ಮೂಲಕ ಅವರು ಆರ್‌ಎಸ್‌ಎಸ್‌ಗೆ ಮಾನಹಾನಿ ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ.

ರಾಹುಲ್ ಗಾಂಧಿ ಹಲವಾರು ಮಾನನಷ್ಟ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕಳೆದ ವರ್ಷ ಸೂರತ್‌ನ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT