ನವದೆಹಲಿ: ಚಲಿಸುತ್ತಿದ್ದ ಕ್ಯಾಬ್ವೊಂದನ್ನು ಸುತ್ತುವರಿದ 'ಥಕ್ ಥಕ್' ಗ್ಯಾಂಗ್ನ ಕದೀಮರು ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆಸಿರುವ ಪ್ರಕರಣ ದೆಹಲಿಯಲ್ಲಿ ವರದಿಯಾಗಿದೆ.
ದೆಹಲಿಯ ಪ್ರಗತಿ ಮೈದಾನ್ ಸುರಂಗ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಎರಡು ಬೈಕ್ಗಳಲ್ಲಿ ಬಂದ ನಾಲ್ವರು ಖದೀಮರು ಗನ್ ತೋರಿಸಿ ಕ್ಯಾಬ್ ಅನ್ನು ಅಡ್ಡಗಟ್ಟಿದ್ದಾರೆ. ನಂತರ ಕಾರಿನ ಒಳಗಿದ್ದ ವ್ಯಕ್ತಿಯ ಬ್ಯಾಗ್ ಕಸಿದುಕೊಂಡು ಕೆಲವೇ ಸೆಕೆಂಡುಗಳಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಶನಿವಾರ ಮಧ್ಯಾಹ್ನ 3ರಿಂದ 4 ಗಂಟೆ ನಡುವೆ ಈ ಘಟನೆ ನಡೆದಿದೆ.
ಈ ಸಂಬಂಧ ಕ್ಯಾಬ್ನಲ್ಲಿದ್ದ ವ್ಯಕ್ತಿ, ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ಆರೋಪಿಗಳು ಈವರೆಗೆ ಪೊಲೀಸರಿಗೆ ಸಿಕ್ಕಿಲ್ಲ.
ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಈ ದರೋಡೆಯ ವಿಡಿಯೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, 'ಲೆಫ್ಟಿನಂಟ್ ಗೌವರ್ನರ್ ಅವರು ಕೂಡಲೇ ರಾಜೀನಾಮೆ ನೀಡಬೇಕು. ದೆಹಲಿಯ ಜನರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಕಲ್ಪಿಸುವ ಬೇರೆಯವರಿಗೆ ಅವಕಾಶ ಮಾಡಿಕೊಡಿ. ದೆಹಲಿಯನ್ನು ಸುರಕ್ಷಿತವಾಗಿಡಲು ಕೇಂದ್ರ ಸರ್ಕಾರಕ್ಕೆ ಆಗದಿದ್ದರೆ, ನಮಗೆ ಅವಕಾಶ ನೀಡಿ. ನಗರವನ್ನು ಮತ್ತು ನಾಗರಿಕರನ್ನು ಹೇಗೆ ಸುರಕ್ಷಿತವಾಗಿ ಇರಿಸಬೇಕು ಎಂಬುದನ್ನು ನಾವು ನಿಮಗೆ ತೋರಿಸುತ್ತೇವೆ' ಎಂದು ತಿಳಿಸಿದ್ದಾರೆ.