ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆಯುತ್ತಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಪ್ರಧಾನ ಕಚೇರಿಯಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ ದೇವೇಂದ್ರ ಶರ್ಮಾ ಅವರನ್ನು ವಿಚಾರಣೆ ನಡೆಸುತ್ತಿದೆ.
ಶರ್ಮಾ ಅವರನ್ನು ಮಂಗಳವಾರ ಕಚೇರಿಗೆ ಕರೆಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಬಿಐನ ಹಿರಿಯ ಅಧಿಕಾರಿಯೊಬ್ಬರು ಐಎಎನ್ಎಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
‘ಸಿಸೋಡಿಯಾ ವಿಚಾರಣೆ ಸಂದರ್ಭದಲ್ಲಿ ಅವರ ಆಪ್ತ ಸಹಾಯಕ ಕೂಡ ಈ ಹಗರಣದಲ್ಲಿ ಭಾಗಿಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಹೀಗಾಗಿ ನಾವು ಶರ್ಮಾ ಅವರನ್ನು ಪ್ರಶ್ನಿಸಲು ನಿರ್ಧರಿಸಿದ್ದೆವು’ ಎಂದು ಅಧಿಕಾರಿ ತಿಳಿಸಿದ್ದಾರೆ.
ಸಿಸೋಡಿಯಾ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯವಿಲ್ಲ ಎಂದು ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿದ ನಂತರ ಸಿಬಿಐ ವಿಶೇಷ ನ್ಯಾಯಾಲಯವು ಸಿಸೋಡಿಯಾ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಈ ಹಗರಣದಲ್ಲಿ ಸಿಬಿಐ ಒಂದು ಚಾರ್ಜ್ ಶೀಟ್ ಸಲ್ಲಿಸಿದ್ದು, ತನ್ನ ಮೊದಲ ಪೂರಕ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧವಾಗಿದೆ. ಇನ್ನೊಂದೆಡೆ ಜಾರಿ ನಿರ್ದೇಶನಾಲಯ ಕೂಡ ಹಗರಣದಲ್ಲಿನ ಅಕ್ರಮ ಹಣ ವರ್ಗಾವಣೆ ವಿಚಾರಣೆ ನಡೆಸುತ್ತಿದ್ದು, ಕೆಲವರನ್ನು ಬಂಧಿಸಿದೆ.