ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿ ಅವಧಿಯನ್ನು ಇಲ್ಲಿನ ನ್ಯಾಯಾಲಯ ಅಕ್ಟೋಬರ್ 13ರವರೆಗೆ ವಿಸ್ತರಿಸಿದೆ.
ಕೇಂದ್ರ ತನಿಖಾ ಸಂಸ್ಥೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್, ಈ ಆದೇಶ ನೀಡಿದ್ದಾರೆ. ಸಂಜಯ್ ಸಿಂಗ್ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದ ಇ.ಡಿ ಕಸ್ಟಡಿ ವಿಚಾರಣೆಯನ್ನು ಐದು ದಿನಗಳ ಕಾಲ ವಿಸ್ತರಿಸುವಂತೆ ಕೋರಿತ್ತು.
2021-22ರ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಆರೋಪದಡಿ ಸಂಜಯ್ ಅವರನ್ನು ಬುಧವಾರ ಇ.ಡಿ ಬಂಧಿಸಿದೆ. ಇವರು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಂತರ ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಎರಡನೇ ಪ್ರಮುಖ ನಾಯಕರಾಗಿದ್ದಾರೆ. ಇದು ದೆಹಲಿ ಆಡಳಿತ ಪಕ್ಷಕ್ಕೆ ದೊಡ್ಡ ಆಘಾತ ನೀಡಿದೆ.