ನವದೆಹಲಿ: ಈ ವರ್ಷದ ಆರಂಭದಲ್ಲಿ ನಡೆದ ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಲು ಕೋರಿ, ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ 17 ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಲು ದೆಹಲಿ ಹೈಕೋರ್ಟ್ ಬುಧವಾರ ಸಮ್ಮತಿಸಿದೆ.
ಅರ್ಜಿ ವಿಚಾರಣೆಗೆ ಪರಿಗಣಿಸಿದ ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ಅವರು, ಅಭ್ಯರ್ಥಿಗಳ ಕೋರಿಕೆ ಕಾನೂನುಬದ್ಧ ಮತ್ತು ನ್ಯಾಯಸಮ್ಮತವಾಗಿಯೇ ಇದೆ ಎಂದು ಹೇಳಿದ್ದಾರೆ.
ಅಂತಿಮ ಫಲಿತಾಂಶ ಪ್ರಕಟಿಸಿದ ಮೇಲೆಯೇ ಕೀ ಉತ್ತರ ಪ್ರಕಟಿಸುವುದು ಎಂದು ಜೂನ್ ತಿಂಗಳಲ್ಲಿ ಯುಪಿಎಸ್ಸಿ ಪತ್ರಿಕಾ ಪ್ರಕಟಣೆ ಹೊರಡಿಸಿತ್ತು.
ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಬೇಕಾದ ಅಂಕಗಳನ್ನು ಗಳಿಸದೇ ಅನರ್ಹರಾದ ಅಭ್ಯರ್ಥಿಗಳು ಯುಪಿಎಸ್ಸಿಯ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದಾರೆ.