ನವದೆಹಲಿ: ‘ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) ಸ್ಥಾಯಿ ಸಮಿತಿಗೆ ಬಿಜೆಪಿ ಹಾಗೂ ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ತಲಾ ಮೂವರನ್ನು ಸದಸ್ಯರನ್ನಾಗಿ ನೇಮಿಸುವಂತೆ ತಾಂತ್ರಿಕ ಪರಿಣತರು ಸೂಚಿಸಿದ್ದಾರೆ. ಮೇಯರ್ ಶೆಲ್ಲಿ ಒಬೆರಾಯ್ ಅವರು ಇದಕ್ಕೆ ಸಮ್ಮತಿ ಸೂಚಿಸಬೇಕು. ಈ ಫಲಿತಾಂಶವನ್ನು ಅವರು ಪ್ರಕಟಿಸಬೇಕು’ ಎಂದು ಬಿಜೆಪಿ ದೆಹಲಿ ಘಟಕವು ಆಗ್ರಹಿಸಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ದೆಹಲಿ ಘಟಕದ ಕಾರ್ಯಾಧ್ಯಕ್ಷ ವೀರೇಂದ್ರ ಸಚ್ದೇವ, ‘ಶೆಲ್ಲಿ ಒಬೆರಾಯ್ ಅವರು ಆರು ಸದಸ್ಯರ ಆಯ್ಕೆಗಾಗಿ ಮರು ಚುನಾವಣೆ ನಡೆಸುವುದಾಗಿ ಪ್ರಕಟಿಸಿದ್ದಾರೆ. ಇದು ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ನಡೆಯಾಗಿದೆ’ ಎಂದು ದೂರಿದ್ದಾರೆ.
‘ಬಿಜೆಪಿ ಸದಸ್ಯರು ಸೋಮವಾರ ಪಾಲಿಕೆಯ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೇಯರ್ ಅವರು ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆ ಇದೆ. ನಮ್ಮ ಬೇಡಿಕೆ ಈಡೇರದಿದ್ದರೆ ಕಾನೂನು ಹೋರಾಟ ನಡೆಸುತ್ತೇವೆ’ ಎಂದಿದ್ದಾರೆ.
ಶುಕ್ರವಾರ ನಡೆದಿದ್ದ ಚುನಾವಣೆ ವೇಳೆ ಶೆಲ್ಲಿ ಒಬೆರಾಯ್ ಅವರು ಒಂದು ಮತ ಅಮಾನ್ಯವಾಗಿರುವುದಾಗಿ ಘೋಷಿಸಿದ್ದರು. ಹೀಗಾಗಿ ಸಭೆಯಲ್ಲಿ ಎಎಪಿ ಮತ್ತು ಬಿಜೆಪಿ ಸದಸ್ಯರ ನಡುವೆ ಹೊಡೆದಾಟ ನಡೆದಿತ್ತು. ಗದ್ದಲವೂ ಏರ್ಪಟ್ಟಿತ್ತು.