ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ: ಬಿಜೆಪಿ ಕಚೇರಿ ಬಳಿ ಪ್ರತಿಭಟನೆ, ಎಎಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

Published 21 ಮೇ 2024, 2:08 IST
Last Updated 21 ಮೇ 2024, 2:08 IST
ಅಕ್ಷರ ಗಾತ್ರ

ನವದೆಹಲಿ: ನಿಷೇಧಾಜ್ಞೆ ಉಲ್ಲಂಘಿಸಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ 19ರಂದು (ಭಾನುವಾರ) ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದಲ್ಲಿ ಎಎಪಿ ನಾಯಕರು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು.

ಪ್ರತಿಭಟನಾ ಮೆರವಣಿಗೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ಜತೆಗೆ ದೀನ್ ದಯಾಳ್ ಉಪಾಧ್ಯಾಯ (ಡಿಡಿಯು) ಮಾರ್ಗದಲ್ಲಿ ಸೆಕ್ಷನ್ 144 ವಿಧಿಸಲಾಗಿದ್ದರೂ ಎಎಪಿ ನಾಯಕರು ನಿಷೇಧಾಜ್ಞೆ ಉಲ್ಲಂಘಿಸಿದ್ದಾರೆ. ಈ ಸಂಬಂಧ ಐಪಿ ಎಸ್ಟೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಜ್ರಿವಾಲ್, ಸಂಜಯ್ ಸಿಂಗ್, ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅತಿಶಿ ಮತ್ತು ಇತರ ಸಂಸದರು ಮತ್ತು ಶಾಸಕರು ಸೇರಿದಂತೆ ಎಎಪಿ ನಾಯಕರು ಕೇಂದ್ರ ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯತ್ತ ಮೆರವಣಿಗೆ ನಡೆಸುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಪೊಲೀಸರು ತಡೆದಿದ್ದರು.

‘ಇದು ಸಣ್ಣ ಪ್ರಕರಣ. ಆದರೆ, ಮುಂದಿನ ದಿನಗಳಲ್ಲಿ ನಮ್ಮ ವಿರುದ್ಧ ದೊಡ್ಡ ಪ್ರಕರಣಗಳು ದಾಖಲಾಗುತ್ತವೆ. ಆದರೆ, ನಮ್ಮ ದೇಶದ ಜನರು ಭಾರತೀಯ ಜನತಾ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆದು ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸರ್ಕಾರವನ್ನು ಅಧಿಕಾರಕ್ಕೆ ತರಲಿದ್ದಾರೆ’ ಎಂದು ಎಎಪಿ ನಾಯಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT