ನವದೆಹಲಿ: ದೆಹಲಿ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಬಂಧಿತರಾಗಿರುವ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಅಕ್ಟೋಬರ್ 9ಕ್ಕೆ ಮುಂದೂಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಮೂರ್ತಿ ಅಮಿತಾಭ್ ರಾವತ್ ಅವರು ರಜೆಯಲ್ಲಿರುವ ಕಾರಣ, ಈ ಅರ್ಜಿಯ ವಿಚಾರಣೆಯನ್ನು ಮುಂದಿನ ತಿಂಗಳಿಗೆ ಮುಂದೂಡಲಾಗಿದೆ. ಈ ಮಾಹಿತಿಯನ್ನು ನ್ಯಾಯಾಲಯದ ಸಿಬ್ಬಂದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಖಾಲಿದ್ ಅವರ ವಕೀಲರಿಗೆ ತಿಳಿಸಿದ್ದಾರೆ.
2020ರ ಫೆಬ್ರುವರಿಯಲ್ಲಿ ದೆಹಲಿಯಲ್ಲಿ ನಡೆದ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಉಮರ್ ಖಾಲಿದ್ ಸೇರಿ ಹಲವರ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನಿನಡಿ ಪ್ರಕರಣ ದಾಖಲಿಸಲಾಗಿತ್ತು. ಆ ಗಲಭೆಯಲ್ಲಿ ಕನಿಷ್ಠ 53 ಮಂದಿ ಮೃತಪಟ್ಟು, ಸುಮಾರು 700 ಮಂದಿ ಗಾಯಗೊಂಡಿದ್ದರು.
ಉಮರ್ ಖಾಲಿದ್ ಅವರು,ಸೆಪ್ಟೆಂಬರ್ 6ರಂದು ಪೊಲೀಸರ ಆಕ್ಷೇಪಣೆ ಮೇರೆಗೆ ಈ ಮೊದಲು ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದು, ಹೊಸದಾಗಿ ಅರ್ಜಿ ಸಲ್ಲಿಸಿದ್ದರು.