ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯದ ಪರಿಸ್ಥಿತಿ ತೀವ್ರವಾಗಿ ಬಿಗಡಾಯಿಸಿದ್ದ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಶಾಲಾ ಕಾಲೇಜುಗಳು ಸೋಮವಾರ ಮತ್ತೆ ತೆರೆಯಲಿವೆ.
ಎಲ್ಲಾ ಸರ್ಕಾರಿ ಕಚೇರಿ, ಶಾಲಾ–ಕಾಲೇಜುಗಳು ಸೋಮವಾರದಿಂದ ಆರಂಭವಾಗಲಿವೆ ಎಂದು ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ಮಾಹಿತಿ ನೀಡಿದ್ದಾರೆ ಎಂಬುದಾಗಿ ‘ಎನ್ಡಿಟಿವಿ‘ ವರದಿ ಮಾಡಿದೆ.
ದೆಹಲಿಯಲ್ಲಿ ಶಾಲೆ, ಕಾಲೇಜು ಮತ್ತು ಇತರೆ ಶೈಕ್ಷಣಿಕ ಸಂಸ್ಥೆಗಳ ಭೌತಿಕ ತರಗತಿಗಳನ್ನು ಬಂದ್ಮಾಡುವಂತೆ ವಾಯು ಗುಣಮಟ್ಟ ನಿರ್ವಹಣಾ ಸಮಿತಿ(ಸಿಎಕ್ಯುಎಂ) ನವೆಂಬರ್ 17ರಂದು ನಿರ್ದೇಶನ ನೀಡಿತ್ತು.
ಅಗತ್ಯ ಸೇವೆಗಳನ್ನು ಹೊರತುಪಡಿಸಿ ದೆಹಲಿಯ ಎಲ್ಲ ಸರ್ಕಾರಿ ಕಚೇರಿಗಳು, ಸ್ವಾಯತ್ತ ಸಂಸ್ಥೆಗಳ ನೌಕರರಿಗೆ ವರ್ಕ್ ಫ್ರಂ ಹೋಮ್ ನೀಡಲಾಗಿತ್ತು.
ವಾಯುಮಾಲಿನ್ಯ ತಡೆಯುವ ನಿಟ್ಟಿನಲ್ಲಿ ದೆಹಲಿ ಮತ್ತು ಎನ್ಸಿಆರ್ ವ್ಯಾಪ್ತಿಯ ರಾಜ್ಯಗಳಿಗೆ ನವೆಂಬರ್ 21ರವರೆಗೆ ಕಟ್ಟಡ ಕಾಮಗಾರಿ, ಕಟ್ಟಡ ತೆರವು ಕಾರ್ಯಾಚರಣೆಗಳನ್ನು ನಡೆಸದಂತೆ ಸಮಿತಿ ಸೂಚಿಸಿತ್ತು.