ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ದಾಖಲೆಗಳ ಡಿಜಿಟಲೀಕರಣವು ಗ್ರಾಮೀಣಾಭಿವೃದ್ಧಿಯ ಸಾಧನ: ರಾಷ್ಟ್ರಪತಿ ದ್ರೌಪದಿ ಮುರ್ಮು

Published 18 ಜುಲೈ 2023, 11:50 IST
Last Updated 18 ಜುಲೈ 2023, 11:50 IST
ಅಕ್ಷರ ಗಾತ್ರ

ನವದೆಹಲಿ: ಡಿಜಿಟಲ್ ಇಂಡಿಯಾವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭೂ ದಾಖಲೆಗಳ ಆಧುನೀಕರಣ ಕಾರ್ಯಕ್ರಮವನ್ನು (ಡಿಜಿಟಲ್ ಇಂಡಿಯಾ ಲ್ಯಾಂಡ್ ರೆಕಾರ್ಡ್ಸ್ ಆಧುನೀಕರಣ) ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದ ದೇಶದ ಒಂಬತ್ತು ರಾಜ್ಯಗಳ ಕಾರ್ಯದರ್ಶಿಗಳು ಹಾಗೂ 68 ಜಿಲ್ಲಾಧಿಕಾರಿಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು 'ಭೂಮಿ ಸಮ್ಮಾನ್' ಪ್ರಶಸ್ತಿಗಳನ್ನು ಮಂಗಳವಾರ ಪ್ರದಾನ ಮಾಡಿದರು.

ನಂತರ ಮಾತನಾಡಿದ ಅವರು ಭೂ ದಾಖಲೆಗಳ ಡಿಜಿಟಲೀಕರಣವು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದರು.

ಡಿಜಿಟಲೀಕರಣವು ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ‘ಡಿಜಿಟಲ್ ಇಂಡಿಯಾ ಲ್ಯಾಂಡ್ ರೆಕಾರ್ಡ್ಸ್ ಆಧುನೀಕರಣ‘ ಕಾರ್ಯಕ್ರಮವು ಗ್ರಾಮೀಣ ಅಭಿವೃದ್ಧಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.

ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮೀಣಾಭಿವೃದ್ಧಿಯೂ ಅತ್ಯಗತ್ಯ. ಬಹುತೇಕ ಗ್ರಾಮೀಣ ಜನರ ಜೀವನವು ಭೂ ಸಂಪನ್ಮೂಲಗಳ ಮೇಲೆ ಅವಲಂಬಿತವಾಗಿದೆ. ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಭೂ ದಾಖಲೆಗಳ ನಿರ್ವಹಣಾ ವ್ಯವಸ್ಥೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಮುರ್ಮು ತಿಳಿಸಿದ್ದಾರೆ.

ಈಗಾಗಲೇ ನೀಡುತ್ತಿರುವ ಆಸ್ತಿ ಪತ್ರ(ಲ್ಯಾಂಡ್ ಕಾರ್ಡ್), ಆಧಾರ್ ಕಾರ್ಡ್‌ನಂತೆ ಉಪಯುಕ್ತವಾಗಲಿದೆ. ಭೂ ದಾಖಲೆಗಳಲ್ಲಿ ಹೊಸ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ನೋಂದಣಿ ಮಾಡಿಕೊಂಡಿರುವ ಭೂ ದಾಖಲೆಗಳ ಮಾಹಿತಿಯೂ ಇ– ಕೋರ್ಟ್‌ ಸೇರಿದಂತೆ ಹಲವೆಡೆ ಬಳಸಬಹುದು. ಹೀಗಾಗಿ ಇದರಿಂದ ಬಹಳಷ್ಟು ಪ್ರಯೋಜನವಿದೆ. ಈ ಮೂಲಕ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವಲ್ಲಿ ಭೂ ದಾಖಲೆಗಳ ಡಿಜಿಟಲೀಕರಣ ಸಹಾಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ಜನರು ತಮ್ಮ ಪೂರ್ವಜರ ಹೆಸರಿನಲ್ಲಿ ಭೂ ದಾಖಲೆಗಳನ್ನು ಹೊಂದಿದ್ದು, ಮಾಹಿತಿ, ಸಂಪನ್ಮೂಲಗಳ ಕೊರತೆಯಿಂದಾಗಿ ಅಥವಾ ವಿವಾದಗಳಿಂದಾಗಿ ನೋಂದಣಿ ಮಾಡಲು ಸಾಧ್ಯವಾಗುತ್ತಿಲ್ಲ. ಇಂತಹ ಪ್ರಕರಣಗಳ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಮುರ್ಮು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT