ಚೆನ್ನೈ:ಕಾವೇರಿ ನದಿಗೆ ಮೇಕೆದಾಟು ಬಳಿ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿ ಕರ್ನಾಟಕ ರೂಪಿಸಿರುವ ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯದ ಪ್ರಮುಖ ವಿರೋಧ ಪಕ್ಷ ಡಿಎಂಕೆ ಮಂಗಳವಾರ ಒತ್ತಾಯಿಸಿದೆ.
ಈ ಜಲಾಶಯ ನಿರ್ಮಾಣ ತಮಿಳುನಾಡು ಹಾಗೂ ರಾಜ್ಯದ ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದೂ ಪಕ್ಷದ ಮುಖಂಡರು ಹೇಳಿದ್ದಾರೆ.
ಪಕ್ಷದ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಟಿ.ಆರ್.ಬಾಲು, ದಯಾನಿಧಿ ಮಾರನ್ ಹಾಗೂ ಕನಿಮೋಳಿ ಅವರನ್ನು ಒಳಗೊಂಡ ನಿಯೋಗ ಪ್ರಧಾನಿ ಮೋದಿ ಅವರನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿತು. ಮೇಕೆದಾಟು ಯೋಜನೆ ವಿರೋಧಿಸಿಪಕ್ಷದ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಬರೆದ ಪತ್ರವನ್ನು ಈ ನಿಯೋಗ ಪ್ರಧಾನಿಗೆ ಸಲ್ಲಿಸಿತು.
ಇತ್ತೀಚೆಗೆ ನವದೆಹಲಿಗೆ ಭೇಟಿ ನೀಡಿದ್ದ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ಹಾಗೂ ಕೇಂದ್ರದ ಕೆಲವು ಸಚಿವರನ್ನು ಭೇಟಿ ಮಾಡಿದ್ದರು. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ನೀಡುವಂತೆಯೂ ಕೋರಿದ್ದರು. ಇದರ ಬೆನ್ನಲ್ಲೇ, ಈ ಯೋಜನೆ ವಿರೋಧಿಸಿ ಡಿಎಂಕೆ ಪತ್ರ ಬರೆದಿದೆ.
ಪ್ರಧಾನಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಮುಖಂಡ ಟಿ.ಆರ್.ಬಾಲು, ‘ತಮಿಳುನಾಡು ಜನರ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂಬುದಾಗಿ ಪ್ರಧಾನಿ ಆಶ್ವಾಸನೆ ನೀಡಿದ್ದಾರೆ‘ ಎಂದು ಹೇಳಿದರು.