ಸೀತಾಪುರ/ವಾರಾಣಸಿ: ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಒಳಗೊಂಡಿರುವ ‘ಇಂಡಿಯಾ’ ಒಕ್ಕೂಟದ ಡಿಎನ್ಎಗೂ ಪಾಕಿಸ್ತಾನದ ಡಿಎನ್ಎಗೂ ಸಾಮ್ಯತೆಯಿದೆ. ಅಲ್ಲಿನ ಜನರು ಹಸಿವಿನಿಂದ ಬಳಲುತ್ತಿದ್ದಾರೆ ಹಾಗೂ ಅಲ್ಲಿ ಅಭಿವೃದ್ಧಿಯ ಕೊರತೆ ಇದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾನುವಾರ ಹೇಳಿದರು.
ಸೀತಾಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ನ ಆಡಳಿತದಲ್ಲಿ ಜನರು ಹಸಿವಿನಿಂದ ಸಾಯುತ್ತಿದ್ದರು. ಈಗ ಪಾಕಿಸ್ತಾನದಲ್ಲಿ ಅದೇ ಪರಿಸ್ಥಿತಿ ಇದೆ. ಭಾರತದಲ್ಲಿ 80 ಕೋಟಿ ಜನರು ಉಚಿತ ಪಡಿತರ ಪಡೆಯುತ್ತಿದ್ದಾರೆ ಎಂದರು.
ದೇಶವನ್ನು ಅಭಿವೃದ್ಧಿಪಡಿಸಲು ಕಾಂಗ್ರೆಸ್ಗೆ 60ರಿಂದ 65 ವರ್ಷಗಳಷ್ಟು ಕಾಲ ಅವಕಾಶ ಸಿಕ್ಕಿತ್ತು. ಆದರೆ ಅವರು ಆ ಕೆಲಸ ಮಾಡಲಿಲ್ಲ. ಯುಪಿಎ ಅಧಿಕಾರಾವಧಿಯಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆ ಇತ್ತು ಎಂದು ಆರೋಪಿಸಿದರು.