ಜಗದಾಲ್ಪುರ (ಛತ್ತೀಸಗಢ): ‘ದೇಶದ ಎಲ್ಲಾ ರಾಜ್ಯ, ಜಿಲ್ಲೆ ಹಾಗೂ ಗ್ರಾಮಗಳ ಬೆಳವಣಿಗೆಯಿಂದ ಮಾತ್ರ ಅಭಿವೃದ್ಧಿ ಹೊಂದಿದ ಭಾರತ್ ಕನಸು ನನಸಾಗಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಚುನಾವಣೆ ಹೊಸ್ತಿಲಲ್ಲಿರುವ ಛತ್ತೀಸಗಢ ರಾಜ್ಯ ಭೇಟಿಯಲ್ಲಿರುವ ಪ್ರಧಾನಿ ಮೋದಿ ಮಂಗಳವಾರ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
‘2014ಕ್ಕೂ ಹಿಂದಿನ ದಿನಗಳಿಗೆ ಹೋಲಿಸಿದಲ್ಲಿ ಕಳೆದ 9 ವರ್ಷಗಳಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ ಕೇಂದ್ರ ನೀಡುತ್ತಿರುವ ಹಣ 20 ಪಟ್ಟು ಹೆಚ್ಚಾಗಿದೆ. ರಾಜ್ಯದಲ್ಲಿ ಕೈಗೊಂಡಿರುವ ಎನ್ಎಂಡಿಸಿ ಸ್ಟೀಲ್ ಕಂಪನಿಯ ಸ್ಥಾಪನೆಯಿಂದ ಬಸ್ತಾರಾ ಹಾಗೂ ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ 50 ಸಾವಿರ ಯುವಕರಿಗೆ ಉದ್ಯೋಗಾವಕಾಶ ಸಿಗಲಿದೆ’ ಎಂದರು.
ಇದೇ ಕಾರ್ಯಕ್ರಮದಲ್ಲಿ ಒಟ್ಟು ₹ 26 ಸಾವಿರ ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ತಡೋಕಿ–ರಾಯ್ಪುರ ನಡುವಿನ ಡೀಸೆಲ್–ವಿದ್ಯುತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು.