ಕೇದಾರನಾಥ (ಉತ್ತರಾಖಂಡ): ಕೇದಾರನಾಥ ದೇವಾಲಯದಿಂದ ಯಾತ್ರಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನವಾಗಿ ಪೈಲೆಟ್ ಸೇರಿದಂತೆ 6 ಜನ ಮೃತಪಟ್ಟಿರುವ ಘಟನೆ ಮಂಗಳವಾರ ಸಂಭವಿಸಿದೆ.
ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಕೇದಾರನಾಥ ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಪೈಲಟ್ ಸೇರಿದಂತೆ ಯಾತ್ರಾರ್ಥಿಗಳು ಮೃತಪಟ್ಟಿರುವ ಸಂಗತಿ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ’ ಎಂದು ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.
केदारनाथ धाम के पास हुए हेलीकॉप्टर दुर्घटना में पायलट सहित कई तीर्थयात्रियों के निधन का समाचार बहुत दुखद है। अपने प्रियजनों को खोने वाले परिवारों के प्रति मैं गहन शोक-संवेदनाएं व्यक्त करती हूं।
ದುರಂತ ಕುರಿತು ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮಾಡಿದ್ದು, ಆರು ಮೃತದೇಹಗಳನ್ನು ಪತ್ತೆ ಹಚ್ಚಲಾಗಿದ್ದು, ಇನ್ನೊಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ. ಹೆಲಿಕಾಪ್ಟರ್ನಲ್ಲಿ ಒಟ್ಟು 7 ಜನ ಇದ್ದರು.
ಈ ದುರ್ಘಟನೆ ಕೇದಾರನಾಥದಿಂದ ಅಣತಿ ದೂರದಲ್ಲಿರುವ ಫಾಟಾದಲ್ಲಿ ನಡೆದಿದೆ. ಮೃತರ ಗುರುತು ಪತ್ತೆಗೆ ಶ್ರಮಿಸಲಾಗುತ್ತಿದ್ದು, ಪರಿಹಾರ ಕಾರ್ಯಾಚರಣೆ ತಂಡ ಸ್ಥಳಕ್ಕೆ ತೆರಳಿದೆ ಎಂದು ಉತ್ತರಾಖಂಡ ಸಿಎಂ ಅವರ ಪ್ರಧಾನ ಕಾರ್ಯದರ್ಶಿ ಅಭಿನವ್ ಕುಮಾರ್ ತಿಳಿಸಿದ್ದಾರೆ.
ಹೆಲಿಕಾಪ್ಟರ್ ಕೇದಾರನಾಥದಿಂದ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಹವಾಮಾನ ವೈಪರಿತ್ಯದಿಂದ ಅಪಘಾತಕ್ಕೆ ಈಡಾಗಿದೆ ಎಂದು ವರದಿ ತಿಳಿಸಿದೆ. ಹೆಲಿಕಾಪ್ಟರ್ ಡೆಹರಾಡೂನ್ಗೆ ತೆರಳುತ್ತಿತ್ತು ಎನ್ನಲಾಗಿದೆ.
ಘಟನೆ ಕುರಿತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತನಿಖೆಗೆ ಆದೇಶಿಸಿದೆ.