ಕೋಲ್ಕತ್ತ: ಲೋಕಸಭಾ ಚುನಾವಣೆೆಯ ತಯಾರಿ ಪರಿಶೀಲನೆಗಾಗಿ ಕೇಂದ್ರ ಚುನಾವಣಾ ಆಯೋಗದ ಪೂರ್ಣ ತಂಡ ಭಾನುವಾರ ಪಶ್ಚಿಮ ಬಂಗಾಳ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಜೊತೆಗೆ ಚುನಾವಣಾ ಆಯುಕ್ತ ಅರುಣ್ ಗೋಯಲ್ ಮೂರು ದಿನಗಳ ಭೇಟಿ ಕೈಗೊಂಡಿದ್ದು, ರಾಜ್ಯದ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಭೇಟಿಯಾಗಲಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಆರಿಜ್ ಅಫ್ತಾಬ್, ಮುಖ್ಯ ಕಾರ್ಯದರ್ಶಿ ಬಿ.ಪಿ. ಗೋಪಾಲಿಕಾ ಮತ್ತು ಡಿಜಿಪಿ ರಾಜೀವ್ ಕುಮಾರ್ ಜೊತೆಗೂ ಸಭೆ ನಡೆಸಲಿದ್ದಾರೆ.
ಭೇಟಿಯ ಪ್ರಾಥಮಿಕ ಉದ್ದೇಶ ಪಶ್ಚಿಮ ಬಂಗಾಳದ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲನೆ ಹಾಗೂ ಲೋಕಸಭೆ ಚುನಾವಣೆಗೆ ತಯಾರಿ ಮೇಲ್ವಿಚಾರಣೆ ನಡೆಸುವುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.