ನವದೆಹಲಿ: ದೆಹಲಿ ಜಲ ಮಂಡಳಿ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿವೃತ್ತ ಮುಖ್ಯ ಇಂಜಿನಿಯರ್ ಮತ್ತು ಗುತ್ತಿಗೆದಾರರನ್ನು ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ನಿವೃತ್ತ ಮುಖ್ಯ ಎಂಜಿನಿಯರ್ ಜಗದೀಪ್ ಕುಮಾರ್ ಅರೋರಾ, ಗುತ್ತಿಗೆದಾರ ಅನಿಲ್ ಕುಮಾರ್ ಅಗರವಾಲ್ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿ ಬಂಧಿಸಲಾಗಿದೆ.
ಈ ಪ್ರಕರಣ ಸಂಬಂಧ ಕಳೆದ ವರ್ಷ ಜುಲೈನಲ್ಲಿ ಇ.ಡಿ ಹಲವೆಡೆ ದಾಳಿ ನಡೆಸಿತ್ತು.
ಜಲಮಂಡಳಿಯ ಟೆಂಡರ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಖಲಿಸಿರುವ ಎರಡು ಎಫ್ಐಆರ್ಗಳ ಬಗ್ಗೆ ಇ.ಡಿ ತನಿಖೆ ನಡೆಸುತ್ತಿದೆ.
ಎನ್ಬಿಸಿಸಿ ಅಧಿಕಾರಿಗಳ ಸಮ್ಮತಿ ಮೇರೆಗೆ ಎನ್ಕೆಜಿ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಕಂಪನಿಗೆ ಎಲೆಕ್ಟ್ರೊ ಮ್ಯಾಗ್ನೆಟಿಕ್ ಫ್ಲೋ ಮೀಟರ್ ಸರಬರಾಜು, ಸ್ಥಾಪನೆ ಮತ್ತು ಪರೀಕ್ಷೆಗೆ ಸಂಬಂಧಿಸಿದ ಟೆಂಡರ್ ನೀಡುವಲ್ಲಿ ಜಲಮಂಡಳಿ ಅನುಕೂಲ ಮಾಡಿಕೊಟ್ಟಿದೆ ಎMದು ಸಿಬಿಐ, ಎಫ್ಐಆರ್ನಲ್ಲಿ ಆರೋಪಿಸಿದೆ.
ಎಸಿಬಿ ದಾಖಲಿಸಿರುವ ಮತ್ತೊಂದು ಎಫ್ಐಆರ್ನಲ್ಲಿ ಜಲಮಂಡಳಿಯ ವಿವಿಧ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಆಟೊಮೇಟಿವ್ ಬಿಲ್ ಪೇಮೆಂಟ್ ಕಲೆಕ್ಷನ್ ಮೆಷಿನ್ಗಳ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂಬುದನ್ನು ಉಲ್ಲೇಖಿಸಲಾಗಿದೆ.