ಮುಂಬೈ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧ, ಇಡಿಜಾರಿ ಪ್ರಕರಣ ಮಾಹಿತಿ ವರದಿ (ಇಸಿಐಆರ್) ಸಲ್ಲಿಸಬೇಕು ಎಂದು ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡಣವೀಸ್ ಶುಕ್ರವಾರ ಒತ್ತಾಯಿಸಿದ್ದಾರೆ.
‘ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂಬುದು ಬಹುತೇಕ ಸಾರ್ವಜನಿಕರ ಭಾವನೆಯಾಗಿದೆ. ಆದರೆ, ಮಹಾರಾಷ್ಟ್ರ ಸರ್ಕಾರ ಅದನ್ನು ಸಿಬಿಐಗೆ ವಹಿಸಲು ಹಿಂಜರಿಯುತ್ತಿದೆ’ ಎಂದಿದ್ದಾರೆ.
‘ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಜನರಿಂದಲೇ ಬೇಡಿಕೆ ಬರುತ್ತಿದೆಯೇ ಹೊರತು ಬಿಜೆಪಿಯಿಂದಲ್ಲ. ಈ ಪ್ರಕರಣದಲ್ಲಿ ದಿನಕ್ಕೊಂದುಹೊಸ, ಹೊಸ ವಿಷಯಗಳು ಬಹಿರಂಗವಾಗುತ್ತಿವೆ. ಹಾಗಾಗಿ, ಜನರೇ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸುತ್ತಿದ್ದಾರೆ’ ಎಂದರು.
ಮುಂಬೈ ಪೊಲೀಸರು ಈ ಪ್ರಕರಣದ ತನಿಖೆಯನ್ನು ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಅನಿಲ್ ದೇಶ್ಮುಖ್ ಇತ್ತೀಚೆಗೆ ಹೇಳಿದ್ದರು.
ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 40 ಜನರ ವಿಚಾರಣೆ ನಡೆಸಲಾಗಿದೆ.