ಮುಂಬೈ:ಎಲ್ಗಾರ್ ಪರಿಷತ್ ಪ್ರಕರಣದ ಆರೋಪಿ, ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಹನಿ ಬಾಬು ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಎನ್.ಎಂ.ಜಾಮ್ದರ್ ಮತ್ತು ಎನ್.ಆರ್.ಬೋರ್ಕರ್ ಅವರಿದ್ದ ವಿಭಾಗೀಯ ಪೀಠ, ‘ಜಾಮೀನು ನಿರಾಕರಿಸಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಬಾಬು ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ತಿಳಿಸಿದೆ.
ಎಲ್ಗಾರ್ ಪರಿಷತ್ –ಮಾವೊ ನಡುವೆ ಸಂಪರ್ಕ ಇದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 2020 ಜುಲೈನಲ್ಲಿ ಬಾಬು ಅವರನ್ನು ಬಂಧಿಸಲಾಗಿದ್ದು, ಸದ್ಯ ಅವರನ್ನು ನವ ಮುಂಬೈನ ತಲೋಜಾ ಕಾರಾಗೃಹದಲ್ಲಿಡಲಾಗಿದೆ.
2017ರ ಡಿಸೆಂಬರ್ 31ರಂದು ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಭೆಯಲ್ಲಿ ಹೋರಾಟಗಾರರೊಬ್ಬರು ಮಾಡಿದ ಭಾಷಣವು ಮರುದಿನವೇ ನಡೆದ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ. ಹಿಂಸಾಚಾರದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.