ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ದದೇವ್ ಭಟ್ಟಾಚಾರ್ಯ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ಶೀಘ್ರದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದರು.
‘ಬುದ್ಧದೇವ್ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಹಾಗಾಗಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಅವರನ್ನು ಆದಷ್ಟು ಬೇಗ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗುವುದು. ಅಲ್ಲಿಯೇ ಅವರ ಆರೋಗ್ಯದ ಮೇಲೆ ನಿಗಾವಹಿಸಲಾಗುವುದು’ ಎಂದು ಅವರು ಸೋಮವಾರ ಹೇಳಿದರು.
‘ಉಸಿರಾಟ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದಬುದ್ಧದೇವ್ ಅವರನ್ನು ದಕ್ಷಿಣ ಕೊಲ್ಕತ್ತದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಸಿರಾಟ ಸಮಸ್ಯೆ ಹೆಚ್ಚಾದ ಕಾರಣ ಅವರನ್ನು ವೆಂಟಿಲೇರ್ನಲ್ಲಿ ಇರಿಸಲಾಗಿತ್ತು. ಆದರೆ ಕೋವಿಡ್ ಪರೀಕ್ಷೆ ನೆಗೆಟಿವ್ ಬಂದಿದೆ’ ಎಂದು ಅವರು ಮಾಹಿತಿ ನೀಡಿದರು.