ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರನ್ನು ಏ.9ರವರೆಗೆ ನ್ಯಾಯಾಂಗ ವಶಕ್ಕೆ ನೀಡಿ ಇಲ್ಲಿನ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ.
ಕವಿತಾ ಅವರನ್ನು ನ್ಯಾಯಾಂಗದ ವಶಕ್ಕೆ ನೀಡಬೇಕೆಂದು ಜಾರಿ ನಿರ್ದೇಶನಾಲಯವು (ಇ.ಡಿ) ಕೋರಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಧೀಶೆ ಕಾವೇರಿ ಬಾವೇಜ ಅವರು ವಿಚಾರಣೆ ನಡೆಸಿ ಈ ಆದೇಶ ನೀಡಿದರು.
ವಿಚಾರಣೆ ವೇಳೆ ಕವಿತಾ ಪರ ವಕೀಲರು, ಕವಿತಾ ಅವರ ಅಪ್ರಾಪ್ತ ವಯಸ್ಸಿನ ಪುತ್ರನಿಗೆ ಪರೀಕ್ಷೆ ಇರುವುದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು. ಇದಕ್ಕೆ ಇ.ಡಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು.
ಹಗರಣದ ಪ್ರಮುಖ ಆರೋಪಿಯಾಗಿದ್ದು. ಇವರ ಬಿಡುಗಡೆಯಾದಲ್ಲಿ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಂಭವವಿದೆ ಎಂದು ವಾದಿಸಿದರು. ಆರೋಪಿಯು ಪ್ರಭಾವಿಯಾಗಿದ್ದಾಗ ಆರ್ಥಿಕ ಅಪರಾಧ ಪ್ರಕರಣಗಳ ವಿಚಾರಣೆಯು ಸಾಮಾನ್ಯ ಅಪರಾಧ ಪ್ರಕರಣಕ್ಕಿಂತ ಸಂಕೀರ್ಣವಾಗಿರುತ್ತದೆ ಎಂದು ಹೇಳಿದರು.
ಮಾ.16ರಂದು ಕವಿತಾ ಅವರನ್ನು ಏಳು ದಿನಗಳ ಕಾಲ ಇ.ಡಿ ಕಸ್ಟಡಿಗೆ ನೀಡಲಾಗಿತ್ತು. ಬಳಿಕ ಶನಿವಾರ ಮತ್ತೆ ಕಸ್ಟಡಿ ಅವಧಿಯನ್ನು ಮೂರು ದಿನಗಳ ಕಾಲ ವಿಸ್ತರಿಸಲಾಗಿತ್ತು.
ಕವಿತಾ ಅವರನ್ನು ಮಾ.15ರಂದು ಬಂಧಿಸಲಾಗಿದೆ.