ಕೋಲ್ಕತ್ತ: ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದುಕೊಂಡಿದ್ದಾರೆ ಎಂಬ ಆರೋಪ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಕೇಳಿಬಂದಿರುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.
ಇಲ್ಲಿನ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ ನಡೆದ ಟಿಎಂಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ತಮ್ಮ ವಿರುದ್ಧದ ಆರೋಪಗಳಿಗೆ ಉತ್ತರಿಸುವ ಸಾಮರ್ಥ್ಯವನ್ನು ಮಹುವಾ ಹೊಂದಿದ್ದಾರೆ ಎಂದು ಹೇಳಿದ್ದಾರೆ.
'ಸಂಸತ್ತಿನಿಂದ ಮಹುವಾ ಅವರನ್ನು ಹೊರಹಾಕುವುದು ಬಿಜೆಪಿಯ ಉದ್ದೇಶವಾಗಿದೆ. ಅದಕ್ಕಾಗಿ ಆ ಪಕ್ಷ ಮಾಡುತ್ತಿರುವ ಪ್ರಯತ್ನವು ಅವರಿಗೆ (ಮಹುವಾಗೆ) ಇನ್ನಷ್ಟು ಜನಪ್ರಿಯತೆ ತಂದುಕೊಡಲಿದೆ. ಮಹುವಾ ಈ ಹಿಂದೆ ಸಂಸತ್ತಿನ ಒಳಗೆ ಏನು ಮಾತನಾಡಿದ್ದಾರೋ.. ಅದನ್ನು ಇನ್ನುಮುಂದೆ ಹೊರಗೂ ಮಾತನಾಡಲಿದ್ದಾರೆ. ಆಕೆಯನ್ನು ಶಿಕ್ಷಿಸುವ ಮೂಲಕ ಬಿಜೆಪಿಯು ಗುರುತರವಾದ ಪ್ರಮಾದವೆಸಗಿದೆ' ಎಂದು ಕಿಡಿಕಾರಿದ್ದಾರೆ.
ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಅನಾರೋಗ್ಯದ ಕಾರಣ ಕಾರ್ಯಕ್ರಮಕ್ಕೆ ನೇರವಾಗಿ ಹಾಜರಿರಲಿಲ್ಲ. ಬದಲಾಗಿ ಅವರು ವರ್ಚುವಲ್ ಆಗಿ ಭಾಗಿಯಾಗಿದ್ದರು.