ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ಇಂದು ದೇಶದಾದ್ಯಂತ ನಡೆದ ಚಕ್ಕಾ ಜಾಮ್ ಅಂತ್ಯವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಹೊರ ವಲಯದಲ್ಲಿ ನಿಯೋಜಿಸಲಾಗಿರುವ ಭದ್ರತೆ ಇನ್ನೂ ಮುಂದುವರಿದಿದೆ.
ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಗಡಿ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಯನ್ನು ಮತ್ತೊಮ್ಮೆ ಕಡಿತಗೊಳಿಸಲಾಗಿದೆ.
ರೈತರು ದೇಶದಾದ್ಯಂತ 'ಚಕ್ಕಾ ಜಾಮ್' ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು (ಫೆಬ್ರುವರಿ 06) ರಾತ್ರಿ 11:59 ಗಂಟೆ ವರೆಗೂ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಹೋರಾಟದ ಹಿಂದೆ ಅಂತರರಾಷ್ಟ್ರೀಯ ಪಿತೂರಿ ಇದೆ ಎಂಬ ಆರೋಪವನ್ನು ರೈತ ನಾಯಕ ರಾಕೇಶ್ ಟಿಕಾಯತ್ ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಟಿಕಾಯತ್, 'ಯಾವ ಅಂತರರಾಷ್ಟ್ರೀಯ ಪಿತೂರಿ? ಯಾವ ಮಾನಹಾನಿ? ರೈತರು ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆ ಕೇಳುತ್ತಿದ್ದಾರೆ. ಇದು ಭಾರತಕ್ಕೆ ಕೆಟ್ಟ ಹೆಸರು ತಂದಂತೆ ಆಗುತ್ತದೆಯೇ? ಬೆಂಬಲ ಬೆಲೆ ಕಾಯ್ದೆ ಇದ್ದರೆ ಮಾತ್ರ ರೈತರ ಬೆಳೆಗೆ ಸರಿಯಾದ ಬೆಲೆ ಸಿಗುತ್ತದೆ. ಬೆಂಬಲ ಬೆಲೆ ಪ್ರಕ್ರಿಯೆ ಇಲ್ಲದಿರುವುದೇ ಒಂದು ದೊಡ್ಡ ಪಿತೂರಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನ: ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ರೈತ, ದಲಿತ, ಕಾರ್ಮಿಕ ಸಂಘಟನೆ ಸದಸ್ಯರು ಶನಿವಾರ ಮಂಗಳೂರು–ಬೆಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಹೊಸಪೇಟೆ-ಕಂಪ್ಲಿ ಹೆದ್ದಾರಿಯಲ್ಲಿ ರೈತರು ರಸ್ತೆತಡೆ ಚಳವಳಿ ನಡೆಸುತ್ತಿದ್ದಾರೆ.
ಮೈಸೂರಿನ ಬೆಂಗಳೂರು ನೀಲಗಿರಿ ರಸ್ತೆ ತಡೆದು ಐಕ್ಯ ಹೋರಾಟ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಸ್ತೆಯಲ್ಲೆ ಅಡುಗೆ ಮಾಡಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿದರು.