ನವದೆಹಲಿ: ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್ಬಿಐ) ನಿರ್ದೇಶಕ ಕ್ರಿಸ್ಟೋಫರ್ ರೇ ಮುಂದಿನ ವಾರ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ಖಚಿತಪಡಿಸಿದ್ದಾರೆ.
ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆಗೆ ಯತ್ನ ಸಂಚಿನಲ್ಲಿ ಭಾರತದ ಕೈವಾಡವಿದೆ ಎಂಬ ಅಮೆರಿಕದ ಆರೋಪದ ನಡುವೆಯೇ ಎಫ್ಬಿಐ ನಿರ್ದೇಶಕ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಭಾರತದಲ್ಲಿರುವ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಕಾರ್ಯಕ್ರಮವೊಂದರಲ್ಲಿ ಅವರ ಭೇಟಿಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಭಾರತದ ಹಿರಿಯ ಭದ್ರತಾ ಅಧಿಕಾರಿಗಳೊಂದಿಗೆ ಅವರು ಮಾತುಕತೆ ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.
ಕಳೆದ ತಿಂಗಳು, ನ್ಯೂಯಾರ್ಕ್ ನಗರದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಪನ್ನೂ ಹತ್ಯೆ ಮಾಡಲು ಸಂಚು ರೂಪಿಸಿದ್ದಕ್ಕಾಗಿ ಅಮೆರಿಕ, ನಿಖಿಲ್ ಗುಪ್ತಾ ಎಂಬ ಭಾರತೀಯ ಪ್ರಜೆಯ ಮೇಲೆ ಕೊಲೆ ಆರೋಪ ಹೊರಿಸಿತ್ತು.