ಮುಂಬೈ (ಪಿಟಿಐ): ‘ಮುಂಬೈನ ಕುರ್ಲಾ ಪ್ರದೇಶದಲ್ಲಿ 12 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು 60 ಮಂದಿಯನ್ನು ರಕ್ಷಿಸಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಕೊಳೆಗೇರಿ ಪುನರ್ವಸತಿ ಪ್ರಾಧಿಕಾರಕ್ಕೆ (ಎಸ್ಆರ್ಎ) ಸೇರಿದ 7ನೇ ಸಂಖ್ಯೆಯ ಕಟ್ಟಡದಲ್ಲಿ ಶುಕ್ರವಾರ ಮಧ್ಯರಾತ್ರಿ ಸುಮಾರು 12.10 ಗಂಟೆಗೆ ಈ ಅವಘಡ ಸಂಭವಿಸಿದೆ. ರಕ್ಷಿಸಲಾದ 60 ಮಂದಿಯ ಪೈಕಿ 39 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೆಲ್ಲರ ಸ್ಥಿತಿ ಸ್ಥಿರವಾಗಿದೆ’ ಎಂದು ಅವರು ಹೇಳಿದ್ದಾರೆ.
‘ಮೊದಲು ನೆಲಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ನಂತರ ಕಟ್ಟಡದ ವಿವಿಧ ಭಾಗಗಳಿಗೆ ವ್ಯಾಪಿಸಿದೆ. ಬೆಂಕಿ ಹೊತ್ತಿಕೊಂಡ ಸ್ಥಳದಲ್ಲಿ ವಿದ್ಯುತ್ ವೈರ್ಗಳು ಹಾಗೂ ಗುಜರಿ ವಸ್ತುಗಳನ್ನು ಇಡಲಾಗಿತ್ತು. ಬೆಂಕಿ ಹೆಚ್ಚಾದಂತೆಲ್ಲ ಕಟ್ಟಡದ ತುಂಬೆಲ್ಲಾ ಹೊಗೆ ಆವರಿಸಿಕೊಂಡಿದೆ. ಇದರಿಂದಾಗಿ ಇಲ್ಲಿನ ನಿವಾಸಿಗಳು ಕಂಗಾಲಾಗಿದ್ದರು’ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಅಗ್ನಿ ಅವಘಡದ ಮಾಹಿತಿ ಬರುತ್ತಿದ್ದಂತೆಯೇ ಅಗ್ನಿಶಾಮಕದಳದ ಸಿಬ್ಬಂದಿಯು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.