ನವದೆಹಲಿ: ತೀಸ್ ಹಜಾರಿ ನ್ಯಾಯಾಲಯದ ಆವರಣದಲ್ಲಿ ಬುಧವಾರ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ನಡೆದಿದೆ. ವಕೀಲರ ಎರಡು ಗುಂಪುಗಳು ಕೃತ್ಯದಲ್ಲಿ ಭಾಗಿಯಾಗಿದ್ದು, ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
‘ಮಧ್ಯಾಹ್ನ 1.35ರ ಸುಮಾರಿಗೆ ವಕೀಲರ ಗುಂಪು ಗಾಳಿಯಲ್ಲಿ ಗುಂಡು ಹಾರಿಸಿದ್ದಾಗಿ ತಿಳಿದುಬಂದಿದೆ’ ಎಂದು ಉಪ ಪೊಲೀಸ್ ಕಮಿಷನರ್ (ಉತ್ತರ) ಸಾಗರ್ ಸಿಂಗ್ ಕಲ್ಸಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವ್ಯಕ್ತಿಯೊಬ್ಬರು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ಮತ್ತು ಇತರರು ಕಲ್ಲು, ಮರದ ತುಂಡುಗಳನ್ನು ಎಸೆಯುತ್ತಿರುವ ಹಾಗೂ ಬಿಳಿ ಬಣ್ಣದ ಶರ್ಟ್ ಧರಿಸಿರುವ ಎರಡು ಗುಂಪು ಪರಸ್ಪರ ಬಡಿದಾಡಿಕೊಂಡ ದೃಶ್ಯವಿದೆ.
ಸದ್ಯ ಪರಿಸ್ಥಿತಿ ಸಹಜವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಪೊಲೀಸ್ ಕಮಿಷನರ್ ಪರಮಾದಿತ್ಯ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.