ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಇದುವರೆಗೆ 4.88 ಲಕ್ಷ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಪ್ರಾದೇಶಿಕ ಹವಾಮಾನ ಕೇಂದ್ರ ಶನಿವಾರ ರಾಜ್ಯದಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಿತ್ತು. ಬ್ರಹ್ಮಪುತ್ರ ನದಿಯು ನೇಮತಿ ಘಾಟ್ ಬಳಿ ಅಪಾಯಮಟ್ಟವನ್ನು ಮೀರಿ ಹರಿಯುತ್ತಿದೆ. ಕಾಮರೂಪ ಮತ್ತ ನಲ್ಬರಿ ಜಿಲ್ಲೆಗಳಲ್ಲಿ ಪುಥಿಮರಿ ಮತ್ತು ಪಾಗ್ಲಡಿಯ ನದಿಗಳಲ್ಲಿ ನೀರಿನ ಮಟ್ಟವು ಅಪಾಯಮಟ್ಟಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವರ್ಷ ಇದುವರೆಗೆ ಪ್ರವಾಹ ಸಂಬಂಧಿ ಅವಘಡಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬಜಲಿ ಉಪವಿಭಾಗ ವ್ಯಾಪ್ತಿಯಲ್ಲಿ ನೆರೆಯ ಕಾರಣ 2.67 ಲಕ್ಷ ಮಂದಿ ತೊಂದರೆಗೆ ಸಿಲುಕಿದ್ದಾರೆ ಎಂದೂ ವಿವರಿಸಿದ್ದಾರೆ.
ನಲ್ಬರಿ ಜಿಲ್ಲೆಯಲ್ಲಿ 80 ಸಾವಿರ ಮಂದಿ ಮತ್ತು ಬರ್ಪೇಟಾ ಜಿಲ್ಲೆಯಲ್ಲಿ 73 ಸಾವಿರ ಮಂದಿ ಸಂಕಷ್ಟಕ್ಕೆ ಒಳಗಾಗಿದ್ದು, 35 ಸಾವಿರ ಮಂದಿ 140 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಬಿಸ್ವನಾಥ್, ದರ್ರಾಂಗ್ ಮತ್ತು ಕೊಕ್ರಜಾರ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಣೆಕಟ್ಟೆ, ರಸ್ತೆಗಳಿಗೆ ಹಾನಿಯುಂಟಾಗಿದೆ. ಕೆಲವೆಡೆ ಭೂಕುಸಿತ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.