ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಉತ್ತರಪ್ರದೇಶ ಹಾಗೂ ಉತ್ತರಾಖಂಡ ರಾಜ್ಯದ ಮಾಜಿ ಮುಖ್ಯಮಂತ್ರಿ ಎನ್.ಡಿ. ತಿವಾರಿ ಗುರುವಾರ ಮಧ್ಯಾಹ್ನನಿಧನರಾಗಿದ್ದಾರೆ.ಅವರಿಗೆ 93 ವರ್ಷ ವಯಸ್ಸಾಗಿತ್ತು.
ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ತಿವಾರಿ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯಾಹ್ನ 2.30ಕ್ಕೆ ತಿವಾರಿ ನಿಧನರಾದರು ಎಂದುಮ್ಯಾಕ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ತಿವಾರಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರು. ಉತ್ತರ ಪ್ರದೇಶದಲ್ಲಿ ಎರಡು ಸಲ ಹಾಗೂ ಉತ್ತರಾಖಂಡದಲ್ಲಿ ಒಂದು ಬಾರಿ ಮುಖ್ಯಮಂತ್ರಿಯಾಗಿದ್ದರು. ಅವಿಭಜಿತ ಆಂಧ್ರಪ್ರದೇಶದ ರಾಜ್ಯಪಾಲರಾಗಿ ಎರಡು ವರ್ಷ ಸೇವೆ ಸಲ್ಲಿಸಿದ್ದರು. ಲೈಂಗಿಕ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 2009ರಲ್ಲಿ ರಾಜ್ಯಪಾಲರ ಹುದ್ದೆಗೆ ರಾಜಿನಾಮೆ ನೀಡಿದ್ದರು.
1990ರಲ್ಲಿ ಪ್ರಧಾನಿ ಹುದ್ದೆಯ ಅಭ್ಯರ್ಥಿಗಳ ಸಾಲಿನಲ್ಲಿತಿವಾರಿ ಅವರ ಹೆಸರು ಕೂಡ ಕೇಳಿಬಂದಿತ್ತು. 1994ರಲ್ಲಿ ಕಾಂಗ್ರೆಸ್ ತೊರೆದು ಅರ್ಜುನ್ ಸಿಂಗ್ ಜೊತೆಗೂಡಿ ಪ್ರಾದೇಶಿಕ ಪಕ್ಷವನ್ನು ಸ್ಥಾಪನೆ ಮಾಡಿದ್ದರು. ನಂತರ ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾದಾಗ ಮರಳಿ ಕಾಂಗ್ರೆಸ್ ಪಕ್ಷ ಸೇರಿದ್ದರು.
ತಿವಾರಿ ನಿಧನಕ್ಕೆ ದೇಶದ ಗಣ್ಯರು ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.