ಗಾಂಧಿನಗರ: ಸೋಮವಾರ ಅಷ್ಟೇ ಕಾಂಗ್ರೆಸ್ ತೊರೆದಿದ್ದ ಗುಜರಾತ್ನ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಅರ್ಜುನ್ ಮೋಧವಾಡಿಯಾ ಮತ್ತು ಅಂಬರೀಷ್ ಡೇರ್ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು.
ಇಲ್ಲಿನ ಪಕ್ಷದ ಕಚೇರಿಯಲ್ಲಿ ಹಲವು ನಾಯಕರ ಸಮ್ಮುಖದಲ್ಲಿ ಕೇಸರಿ ಪಕ್ಷವನ್ನು ಸೇರಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೋಧವಾಡಿಯಾ, ‘ದೇಶಕ್ಕೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯಬೇಕೆಂಬ ಮಹಾತ್ಮ ಗಾಂಧಿ ಅವರ ಕನಸನ್ನು ನನಸು ಮಾಡಲು ಶ್ರಮಿಸುತ್ತಿರುವ ನರೇಂದ್ರ ಮೋದಿ ಅವರ ಕೆಲಸಕ್ಕೆ ಕೈಜೋಡಿಸುತ್ತೇನೆ. 1947ರಲ್ಲೇ ಭಾರತ ಸ್ವತಂತ್ರಗೊಂಡರೂ ಮಹಾತ್ಮ ಗಾಂಧಿ ಕನಸು ನನಸಾಗಿಲ್ಲ. ಗುಜರಾತ್ನ ಇಬ್ಬರು ಮಕ್ಕಳಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ದೇಶವನ್ನು ಮುನ್ನಡೆಸುತ್ತಿದ್ದಾರೆ. ಅಭಿವೃದ್ಧಿಶೀಲ ಭಾರತ ನಿರ್ಮಾಣಕ್ಕಾಗಿ ಶ್ರಮಿಸುತ್ತಿದ್ದಾರೆ’ ಎಂದು ಹೇಳಿದರು.
ಡೇರ್ ಮಾತನಾಡಿ, ‘ಹಲವಾರು ವರ್ಷಗಳಿಂದ ಬಾಕಿ ಉಳಿದಿದ್ದ ಸಮಸ್ಯೆಗಳನ್ನು ಬಿಜೆಪಿ ಇತ್ಯರ್ಥ ಮಾಡುತ್ತಿದೆ. ಅಯೋಧ್ಯೆಯ ರಾಮ ಮಂದಿರ ವಿಚಾರವಾಗಿ ಕಾಂಗ್ರೆಸ್ ನಾಯಕರು ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ’ ಎಂದು ಹೇಳಿದರು.
ಉಭಯ ನಾಯಕರು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅಯೋಧ್ಯೆಯ ರಾಮಮಂದಿರದ ಉದ್ಘಾಟನಾ ಸಮಾರಂಭದ ಆಹ್ವಾನವನ್ನು ಪಕ್ಷವು ತಿರಸ್ಕರಿಸಿದ್ದರಿಂದ ಬೇಸರಗೊಂಡು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದರು.