ಜಗ್ದಾಲ್ಪುರ: ಛತ್ತೀಸಗಢದ ಭೂಪೇಶ್ ಬಘೇಲ್ ಸರ್ಕಾರವು ಮತಾಂತರಕ್ಕೆ ಪ್ರೋತ್ಸಾಹ ನೀಡುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಗಿರಿರಾಜ ಸಿಂಗ್, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಇದನ್ನು ತಡೆಯಲು ಕಾನೂನು ತರಲಾಗುವುದು ಎಂದು ಗುರುವಾರ ಹೇಳಿದ್ದಾರೆ.
ಜಗ್ದಾಲ್ಪುರದಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡಿದ ಅವರು, ‘ಮುಖ್ಯವಾಗಿ ಬಸ್ತರ್ ಪ್ರದೇಶದಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ’ ಎಂದಿದ್ದಾರೆ.
‘ಸನಾತನ’ ಮತ್ತು ‘ಆದಿವಾಸಿ’ಗಳು ತಮ್ಮ ಅಸ್ಮಿತೆಯನ್ನು ಕಳೆದುಕೊಂಡರೆ ಪ್ರಜಾಪ್ರಭುತ್ವವು ಅಪಾಯಕ್ಕೆ ಸಿಲುಕಲಿದೆ ಎಂದೂ ಅವರು ಪ್ರತಿಪಾದಿಸಿದ್ದಾರೆ.
ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರದ ಮಂಜೂರು ಮಾಡಿರುವ ಅನುದಾನವನ್ನು ಕಾಂಗ್ರೆಸ್ ಸರ್ಕಾರವು ದುರ್ಬಳಕೆ ಮಾಡುತ್ತಿದೆ ಎಂದೂ ಆರೋಪಿಸಿದ್ದಾರೆ.