ನವದೆಹಲಿ: ದೇಶದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ಸಂಭವಿಸುತ್ತಿರುವ ಸಾವಿನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ₹ 30 ಲಕ್ಷ ಪರಿಹಾರ ನೀಡಬೇಕು ಎಂದು ಶುಕ್ರವಾರ ಆದೇಶಿಸಿದೆ.
ಒಳಚರಂಡಿಗಳ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗುವವರಿಗೆ ಕನಿಷ್ಠ ₹ 20 ಲಕ್ಷ ಪರಿಹಾರ ಒದಗಿಸಬೇಕು. ಇದನ್ನು ಹೊರತುಪಡಿಸಿ ಬೇರೆ ಯಾವುದೇ ವೈಕಲ್ಯತೆಗೆ ತುತ್ತಾದವರಿಗೆ ಸಂಬಂಧಪಟ್ಟ ಆಡಳಿತವು ₹ 10 ಲಕ್ಷ ಪರಿಹಾರ ಪಾವತಿಸಬೇಕಾಗುತ್ತದೆ ಎಂದು ನ್ಯಾ. ಎಸ್.ರವೀಂದ್ರ ಭಟ್ ಹಾಗೂ ನ್ಯಾ. ಅರವಿಂದ್ ಕುಮಾರ್ ಅವರನ್ನೊಳಗೊಂಡ ಪೀಠ ಸೂಚಿಸಿದೆ.
'ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಸಂಪೂರ್ಣ ನಿರ್ಮೂಲನೆಗೊಂಡಿದೆ ಎಂಬುದನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಖಚಿತಪಡಿಸಿಕೊಳ್ಳಬೇಕು' ಎಂದು ಪೀಠ ಹೇಳಿದೆ.
ಕೇಂದ್ರ ಸರ್ಕಾರ 2022ರಲ್ಲಿ ಲೋಕಸಭೆಗೆ ನೀಡಿದ ಅಂಕಿ–ಅಂಶಗಳ ಪ್ರಕಾರ, ದೇಶದಾದ್ಯಂತ ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಸ್ವಚ್ಛತೆ ವೇಳೆ 347 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಉತ್ತರ ಪ್ರದೇಶ, ತಮಿಳುನಾಡು ಮತ್ತು ದೆಹಲಿಯಲ್ಲಿ ಶೇ 40 ಪ್ರಕರಣಗಳು ವರದಿಯಾಗಿವೆ.
ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಅರ್ಜಿ ವಿಚಾರಣೆ ನಡೆಸಿದ ಪೀಠ, ಈ ತೀರ್ಪು ನೀಡಿದೆ.