ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆಯಾದರೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವದಷ್ಟೇ ಅಲ್ಲದೆ ಭವಿಷ್ಯದಲ್ಲಿ ಅಂತಹ ಘಟನೆಗಳು ಮರುಕಳಿಸದಂತೆ ತಡೆಯುವ ಗುರಿ ಹೊಂದಿದ್ದೇವೆ ಎಂದು ಕಾಂಗ್ರೆಸ್ ಶುಕ್ರವಾರ ಪ್ರತಿಪಾದಿಸಿದೆ.
ಅಧಿಕಾರಕ್ಕೆ ಬಂದರೆ ಪ್ರಶ್ನೆಪತ್ರಿಕೆಗಳ ಸೋರಿಕೆ ವಿರುದ್ಧ ಕಠಿಣ ಕಾನೂನನ್ನು ತರುವುದಾಗಿ ಕಾಂಗ್ರೆಸ್ ಘೋಷಿಸಿದೆ. ಈ ಕುರಿತು ಸ್ಪಷನೆ ನೀಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, 'ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟುವುದರೊಂದಿಗೆ ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಘೋಷಿಸಿದ್ದರು. ಇದರಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು ಸೇರಿದಂತೆ 30 ಲಕ್ಷ ಹುದ್ದೆಗಳ ಭರ್ತಿ, ಡಿಪ್ಲೊಮಾ-ಪದವೀಧರರಿಗೆ ಶಿಷ್ಯವೇತನ ಸಹಿತ ಅಪ್ರೆಂಟಿಸ್ಷಿಪ್, ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಸ್ಟಾರ್ಟ್ಅಪ್ಗಳಿಗೆ ನಿಧಿ ಭರವಸೆಗಳನ್ನು ಒಳಗೊಂಡಿದೆ.
'ಹಲವು ರಾಜ್ಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಾನೂನು ಇದ್ದರೂ ಕಳೆದ ಏಳು ವರ್ಷಗಳಲ್ಲಿ 70ಕ್ಕೂ ಹೆಚ್ಚು ಪ್ರಶ್ನೆಪ್ರತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಎರಡು ಕೋಟಿಗೂ ಹೆಚ್ಚು ಆಕಾಂಕ್ಷಿಗಳ ಭವಿಷ್ಯವನ್ನು ಹಾಳು ಮಾಡಿದೆ. ಉತ್ತರ ಪ್ರದೇಶದಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ 50 ಲಕ್ಷ ಆಕಾಂಕ್ಷಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ' ಎಂದು ಜೈರಾಮ್ ಹೇಳಿದರು.