ಅಹಮದಾಬಾದ್: ಜುನಾಗಢದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 8ರಿಂದ 10 ವ್ಯಕ್ತಿಗಳನ್ನು ಸಾರ್ವಜನಿಕವಾಗಿ ಥಳಿಸಿದ ಪ್ರಕರಣ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಬುಧವಾರ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎ.ಜೆ. ದೇಸಾಯಿ ಮತ್ತು ನ್ಯಾಯಮೂರ್ತಿ ಬಿರೆನ್ ವೈಷ್ಣವ್ ಅವರಿದ್ದ ವಿಭಾಗೀಯ ಪೀಠವು ತ್ವರಿತವಾಗಿ ಅರ್ಜಿಯ ವಿಚಾರಣೆಗೆ ನಿರಾಕರಿಸಿತು.
‘ಪೊಲೀಸರ ವಿರುದ್ಧ ಸಂತ್ರಸ್ತರು ದೂರು ಸಲ್ಲಿಸಿದ್ದು, ಅದನ್ನು ವಾಪಸ್ ಪಡೆಯುವಂತೆ ಒತ್ತಡ ಹೇರಲಾಗುತ್ತಿದೆ. ಹಾಗಾಗಿ, ತ್ವರಿತವಾಗಿ ಅರ್ಜಿಯನ್ನು ಕೈಗೆತ್ತಿಕೊಳ್ಳಬೇಕು’ ಎಂದು ಅರ್ಜಿದಾರರ ಪರ ವಕೀಲ ಎ.ಜೆ. ಯಾಗ್ನಿಕ್ ಕೋರಿದರು. ಆದರೆ, ಈ ಮನವಿಯನ್ನು ಪೀಠವು ಪುರಸ್ಕರಿಸಲಿಲ್ಲ.
ಜೂನ್ 16ರಂದು ಜುನಾಗಢದ ಗಲಭೆಗೆ ಸಂಬಂಧಿಸಿದಂತೆ ಅಲ್ಲಿನ ಹಜರತ್ ಗೆಬಾನ್ಶಾ ಪಿರ್ ದರ್ಗಾದ ಮುಂಭಾಗ ಸಂತ್ರಸ್ತರನ್ನು ಸಾಲಾಗಿ ನಿಲ್ಲಿಸಿ ಪೊಲೀಸರು ಥಳಿಸಿದ್ದರು. ಈ ಕುರಿತ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.