ಅಹಮದಾಬಾದ್: ಕಾಂಗ್ರೆಸ್ ಪಕ್ಷದ ಗುಜರಾತ್ ರಾಜ್ಯ ಘಟಕದ ಮಾಜಿ ಕಾರ್ಯಾಧ್ಯಕ್ಷ ಹಾಗೂ ಪಾಟೀದಾರ್ ಮೀಸಲಾತಿ ಆಂದೋಲನದ ನಾಯಕ ಹಾರ್ದಿಕ್ ಪಟೇಲ್ ಅವರು ಜೂನ್ 2ರಂದು ಬಿಜೆಪಿ ಸೇರಲಿದ್ದಾರೆ. ಈ ಕುರಿತು ಬಿಜೆಪಿ ವಕ್ತಾರ ಭರತ್ ಡಂಗರ್ ಮಾಹಿತಿ ನೀಡಿದ್ದಾರೆ.
ಪಕ್ಷದ ಗುಜರಾತ್ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ್ ಹಾಗೂ ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಉಪಸ್ಥಿತಿಯಲ್ಲಿ ಹಾರ್ದಿಕ್ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಅದೇ ದಿನ ಶ್ವೇತ ಬ್ರಹ್ಮ ಭಟ್ ಸಹ ಪಕ್ಷ ಸೇರಲಿದ್ದಾರೆ ಎಂದು ಅವರು ಹೇಳಿರುವುದಾಗಿ ಮೂಲಗಳು ತಿಳಿಸಿವೆ. ಶ್ವೇತ ಅವರು ಹಿಂದೆ ಕಾಂಗ್ರೆಸ್ ಪಕ್ಷದಿಂದ ಮಣಿನಗರ್ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
‘ಕಾಂಗ್ರೆಸ್ ಪಕ್ಷದವರೇ ನನ್ನನ್ನು ನಿರ್ಲಕ್ಷಿಸಿ, ಮೂಲೆಗುಂಪು ಮಾಡುತ್ತಿದ್ದಾರೆ’ ಎಂದು ಹಾರ್ದಿಕ್ ಇತ್ತೀಚೆಗೆ ಬಹಿರಂಗವಾಗಿ ಟೀಕಿಸಿದ್ದರು. ರಾಹುಲ್ ಗಾಂಧಿ ಅವರಿಂದ ‘ತೇಜೋವಧೆ’ಗೆ ಒಳಗಾಗಿದ್ದೇನೆ ಎಂದು ಹೇಳಿದ್ದರು. ಈ ಘಟನೆಗಳ ನಂತರ ಅವರು ಮೇ 19ರಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.