ಮುಂಬೈ: ಪರಿಶಿಷ್ಟ ಜಾತಿ ಮತ್ತು ಪಂಗಡದವರ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ವೀರ್ಸಿಂಗ್ ಅವರನ್ನು ಮೇ 24ರ ವರೆಗೆ ಬಂಧಿಸದಂತೆ ಬಾಂಬೆ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ.
ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡಸಿದ ನ್ಯಾಯಮೂರ್ತಿಗಳಾದ ಎಸ್.ಜೆ.ಕಾಥಾವಾಲಾ ಹಾಗೂ ಎಸ್.ಪಿ.ತಾವಡೆ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.
ಶುಕ್ರವಾರ ಮಧ್ಯರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿತು. ‘ಇದು ರಜಾಕಾಲದ ನ್ಯಾಯಪೀಠ. ಹೀಗಾಗಿ ಅರ್ಜಿಯ ವಿಚಾರಣೆಯನ್ನು ಸೋಮವಾರ ಮುಂದುವರಿಸಲಾಗುವುದು’ ಎಂದು ನ್ಯಾಯಮೂರ್ತಿಗಳು ಹೇಳಿದರು.
‘ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ರದ್ದು ಮಾಡಬೇಕು ಹಾಗೂ ಈ ಪ್ರಕರಣ ಕುರಿತಂತೆ ಸಿಬಿಐ ತನಿಖೆಗೆ ಆದೇಶಿಸಬೇಕು’ ಎಂದು ಕೋರಿ ಪರಮ್ವೀರ್ ಸಿಂಗ್ ಅರ್ಜಿ ಸಲ್ಲಿಸಿದ್ದಾರೆ.