ಪ್ರಯಾಗರಾಜ್ (ಉತ್ತರ ಪ್ರದೇಶ): ವಾರಾಣಸಿಯ ಗ್ಯಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ವಿಗ್ರಹ ಪೂಜೆಗೆ ಹಿಂದೂಗಳಿಗೆ ಅವಕಾಶ ಕಲ್ಪಿಸಿದ್ದ ಆದೇಶ ಪ್ರಶ್ನಿಸಿ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ. ವ್ಯಾಸ್ ತೆಹ್ಖಾನಾ ಎಂಬ ಮಸೀದಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ ಮುಂದುವರಿಯಲಿದೆ ಎಂದು ಹೈಕೋರ್ಟ್ ಹೇಳಿದೆ.
ವ್ಯಾಸ್ ತೆಹ್ಖಾನಾ ಎಂಬ ಮಸೀದಿಯ ದಕ್ಷಿಣದ ನೆಲಮಾಳಿಗೆಯ ರಿಸೀವರ್ ಆಗಿ ಡಿಸ್ಟ್ರಿಕ್ ಮ್ಯಾಜಿಸ್ಟ್ರೇಟ್ ಅವರನ್ನು ನೇಮಕ ಮಾಡಿ ಜನವರಿ 17ರಂದು ವಾರಾಣಸಿ ಜಿಲ್ಲಾ ನ್ಯಾಯಾಧೀಶರು ನೀಡಿದ್ದ ಆದೇಶ ಮತ್ತು ಜನವರಿ 31ರ ಆದೇಶದಲ್ಲಿ ನೆಲಮಾಳಿಗೆಯಲ್ಲಿ ಪೂಜೆಗೆ ಅವಕಾಶ ಕಲ್ಪಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.
ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್, ‘ಪ್ರಕರಣದ ಸಂಪೂರ್ಣ ದಾಖಲೆಗಳನ್ನು ಪರಿಶೀಲಿಸಿದ ಮತ್ತು ಸಂಬಂಧಪಟ್ಟವರ ವಾದಗಳನ್ನು ಪರಿಗಣಿಸಿದ ನಂತರ, ಜನವರಿ 17ರಂದು ಜಿಲ್ಲಾ ನ್ಯಾಯಾಧೀಶರು ನೀಡಿದ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯಕ್ಕೆ ಯಾವುದೇ ಕಾರಣ ಸಿಕ್ಕಿಲ್ಲ’ ಎಂದಿದ್ದಾರೆ.
ಕಕ್ಷಿದಾರರ ಪರ ವಕೀಲರ ವಾದ ಆಲಿಸಿದ ನಂತರ ನ್ಯಾಯಮೂರ್ತಿ ಅಗರ್ವಾಲ್ ಅವರು ಫೆಬ್ರವರಿ 15ರಂದು ತೀರ್ಪನ್ನು ಕಾಯ್ದಿರಿಸಿದ್ದರು.
ವಾರಾಣಸಿಯ ಗ್ಯಾನವಾಪಿ ಮಸೀದಿಯ ವ್ಯವಹಾರಗಳನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.