ಕೋಲ್ಕತ್ತ: ಪಶ್ಚಿಮ ಬಂಗಾಳ ಕರಾವಳಿಗೆ ಇಂದು ರೀಮಲ್ ಚಂಡಮಾರುತ ಅಪ್ಪಳಿಸಲಿದೆ. ಅದಕ್ಕೂ ಮುನ್ನ ರಾಜ್ಯದ ಹಲವೆಡೆ ಭಾರಿ ಪ್ರಮಾಣದಲ್ಲಿ ಗಾಳಿ ಬೀಸುತ್ತಿದ್ದು, ವ್ಯಾಪಕ ಮಳೆಯಾಗುತ್ತಿದೆ.
ದಕ್ಷಿಣ 24 ಪರಗಣ ಜಿಲ್ಲೆಯ ಗೋಸಾಬಾ ಮತ್ತು ಸುಂದರಬನ್ಸ್ನಲ್ಲಿ ಭಾರಿ ಮಳೆಯಾಗುತ್ತಿದ್ದು, ಬಕ್ಕಲಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ ಎಂದು ವರದಿಯಾಗಿದೆ.
ಪೂರ್ವ ಮೇದಿನಿಪುರ ಜಿಲ್ಲೆಯ ಮಂದರ್ಮಣಿ ಮತ್ತು ದಿಘಾ ಪ್ರದೇಶದಲ್ಲಿ ಹವಾಮಾನದಲ್ಲಿ ಬದಲಾವಣೆಯಾಗಿದೆ ಎಂದು ಹೇಳಲಾಗಿದೆ.
ಹವಾಮಾನ ಇಲಾಖೆ ಪ್ರಕಾರ, 'ರೀಮಲ್' ಚಂಡಮಾರುತವು ಮುಂದಿನ ಕೆಲವು ಗಂಟೆಗಳಲ್ಲಿ ತೀವ್ರ ಚಂಡಮಾರುತವಾಗಿ ತೀವ್ರಗೊಳ್ಳಲಿದ್ದು ಇಂದು (ಮೇ 26) ಮಧ್ಯರಾತ್ರಿಯ ಸುಮಾರಿಗೆ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಕರಾವಳಿಯ ನಡುವೆ ಹಾದುಹೋಗಲಿದೆ.