ಶ್ರೀನಗರ: ಇದೇ 30ರಿಂದ ಮೂರು ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಲ್ಲಿನ ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ಮತ್ತು ಎರಡು ರ್ಯಾಲಿ ಉದ್ದೇಶಿಸಿ ಮಾತನಾಡುವರು ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಶನಿವಾರ ತಿಳಿಸಿದ್ದಾರೆ.
ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸುನಿಲ್ ಶರ್ಮಾ, ‘ಶಾ ಪ್ರವಾಸವನ್ನು ವಿಧಾನಸಭೆ ಚುನಾವಣೆಗೆ ಸಂಬಂಧ ಕಲ್ಪಿಸಬಾರದು. ಸ್ವಾಯತ್ತ ಸಂಸ್ಥೆಯಾಗಿರುವ ಕೇಂದ್ರ ಚುನಾವಣಾ ಆಯೋಗ ಚುನಾವಣೆ ದಿನಾಂಕ ನಿಗದಿ ಪಡಿಸಲಿದೆ. ಪಕ್ಷ ಚುನಾವಣೆಗೆ ಸಿದ್ಧವಾಗಿದೆ. ಶಾ ಭೇಟಿ ಮಾಮೂಲು ಆಗಿದೆ’ ಎಂದರು.
‘ಅ. 1 ರಂದು ರಜೌರಿ (ಜಮ್ಮು ವಿಭಾಗ) ಮತ್ತು 2 ರಂದು ಬೆಳಿಗ್ಗೆ 11 ಗಂಟೆಗೆ ಬಾರಾಮುಲ್ಲಾ ಪಟ್ಟಣದಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.ಕೇಂದ್ರ ಸರ್ಕಾರದಿಂದ ಕಾಶ್ಮೀರ ಜನತೆ ಅನೇಕ ನಿರೀಕ್ಷೆ ಮತ್ತು ಭರವಸೆ ಹೊಂದಿದ್ದಾರೆ’ ಎಂದು ಅವರು ಹೇಳಿದರು.
ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಶಾ ಅವರು ರಾಜ್ಯಕ್ಕೆ ಎರಡನೇ ಬಾರಿಗೆ ಭೇಟಿ ನೀಡುತ್ತಿದ್ದಾರೆ.