ಚೆನ್ನೈ: ಇಲ್ಲಿನ ಐಐಟಿ– ಮದ್ರಾಸ್ನಲ್ಲಿ ಸ್ನಾತಕೋತ್ತರ ಎಂಜಿನಿಯರಿಂಗ್ ಪದವಿ (ಎಂ.ಎಸ್– ಎಲೆಕ್ಟ್ರಿಕಲ್) ವ್ಯಾಸಂಗ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ 22 ವರ್ಷದ ವಿದ್ಯಾರ್ಥಿಯೊಬ್ಬರು ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಇದೇ ಐಐಟಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬರು ಕೆಲವು ಮಾತ್ರೆಗಳನ್ನು ಸೇವಿಸಿ ಜೀವಕ್ಕೆ ಅಪಾಯ ತಂದುಕೊಂಡಿರುವ ಘಟನೆಯೂ ನಡೆದಿದೆ. ಈ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
‘ಮಹಾರಾಷ್ಟ್ರ ಮೂಲದ ವಿದ್ಯಾರ್ಥಿ ಗೈರಾಗಿದ್ದನ್ನು ಗಮನಿಸಿದ ಸಹಪಾಠಿಯೊಬ್ಬರು ಈ ಕುರಿತು ವಾರ್ಡನ್ಗೆ ಮಾಹಿತಿ ನೀಡಿದ್ದಾರೆ. ಕೊಠಡಿಯ ಬಾಗಿಲು ತೆರೆದು ನೋಡಿದಾಗ, ವಿದ್ಯಾರ್ಥಿಯ ಶವ ನೇಣುಬಿಗಿದ ಸ್ಥಿತಿಯಲ್ಲಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಕೊಟ್ಟುಪುರಂನ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಐಐಟಿ– ಮದ್ರಾಸ್ನಿಂದ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.