ನವದೆಹಲಿ: ಕುಸ್ತಿಪಟುಗಳು ಗಂಗಾ ನದಿಯಲ್ಲಿ ತಮ್ಮ ಪದಕಗಳನ್ನು ಎಸೆಯುವುದರಿಂದ ನ್ಯಾಯಾಲಯ ನನ್ನನ್ನು ನೇಣಿಗೆ ಹಾಕುವುದಿಲ್ಲ. ಬದಲಾಗಿ, ನನ್ನ ವಿರುದ್ಧ ಸಾಕ್ಷ್ಯಗಳನ್ನು ಸಲ್ಲಿಸಬೇಕು ಎಂದು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ಭೂಷಣ್ ಸಿಂಗ್ ಹೇಳಿದ್ದಾರೆ.
ನನ್ನ ವಿರುದ್ಧದ ಆರೋಪ ಸಾಬೀತಾದರೆ, ಯಾವುದೇ ಶಿಕ್ಷೆ ಅನುಭವಿಸಲು ಸಿದ್ಧವಿದ್ದೇನೆ. ನ್ಯಾಯಾಲಯ ಗಲ್ಲು ಶಿಕ್ಷೆ ಕೊಟ್ಟರೂ ಅದಕ್ಕೂ ಸಿದ್ಧ ಎಂದೂ ಅವರು ಹೇಳಿದ್ದಾರೆ.
‘ನನ್ನ ವಿರುದ್ಧ ಒಂದು ಆರೋಪ ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.
ನನ್ನ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿ ಯಾವುದೇ ಸಾಕ್ಷಿ ಇದ್ದರೂ ನ್ಯಾಯಾಲಯಕ್ಕೆ ಸಲ್ಲಿಸಿ, ನಾನು ಯಾವುದೇ ಶಿಕ್ಷೆ ಅನುಭವಿಸಲು ಸಿದ್ಧವಿದ್ದೇನೆ ಎಂದು ಅವರು ಪ್ರತಿಭಟನಾನಿರತ ಕುಸ್ತಿ ಪಟುಗಳಿಗೆ ಸವಾಲು ಹಾಕಿದ್ದಾರೆ.
ಬ್ರಿಜ್ಭೂಷಣ್ ಬಂಧನಕ್ಕೆ ಒತ್ತಾಯಿಸಿ ದೇಶದ ಪ್ರಮುಖ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತು ವಿನೇಶ್ ಫೊಗಟ್ ಮಂಗಳವಾರ ಹರಿದ್ವಾರಕ್ಕೆ ತೆರಳಿ ತಾವು ಕಷ್ಟ ಪಟ್ಟು ಸಂಪಾದಿಸಿದ್ದ ಒಲಿಂಪಿಕ್ಸ್ ಮತ್ತು ವಿಶ್ವ ಚಾಂಪಿಯನ್ಷಿಪ್ ಪದಕಗಳನ್ನು ಗಂಗಾ ನದಿಗೆ ಎಸೆಯಲು ಮುಂದಾಗಿದ್ದರು. ಬಳಿಕ, ರೈತ ಮುಖಂಡರು ಅವರನ್ನು ಮನವೊಲಿಸುವಲ್ಲಿ ಸಫಲರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.