ಹೈದರಾಬಾದ್: 2023ರ ವಿಧಾನಸಭೆ ಚುನಾವಣೆ ಬಳಿಕ ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಭಾರತ ರಾಷ್ಟ್ರ ಸಮಿತಿಗೆ (ಬಿಆರ್ಎಸ್) ವಿಧಾನಪರಿಷತ್ ಉಪಚುನಾವಣೆಯಲ್ಲಿ ಗೆಲುವು ಲಭಿಸಿದೆ.
ಮೆಹಬೂಬ್ ನಗರದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆದ ಉಪಚುನಾವಣೆಯಲ್ಲಿ ಬಿಆರ್ಎಸ್ ಪಕ್ಷದ ಅಭ್ಯರ್ಥಿ ಕೆ.ನವೀನ್ ಕುಮಾರ್ ರೆಡ್ಡಿ ಅವರು ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು 108 ಮತಗಳ ಅಂತರದಲ್ಲಿ ಮಣಿಸಿದ್ದಾರೆ.
ಬಿಆರ್ಎಸ್ ಗೆದ್ದಿರುವ ಮೆಹಬೂಬ್ ನಗರವು ಮುಖ್ಯಮಂತ್ರಿ ರೇವಂತ್ ರೆಡ್ಡಿಯವರ ತವರೂರಾಗಿದ್ದು, ಕಾಂಗ್ರೆಸ್ಗೆ ಹಿನ್ನಡೆಯಾಗಿದೆ.
ವಿಧಾನ ಪರಿಷತ್ ಸದಸ್ಯರಾಗಿದ್ದ ಕಾಸಿರೆಡ್ಡಿ ನಾರಾಯಣ ರೆಡ್ಡಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಲ್ವಕುರ್ತಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಶಾಸಕರಾಗಿ ಆಯ್ಕೆಯಾದ್ದರಿಂದ ವಿಧಾನಪರಿಷತ್ಗೆ ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧೆ ಮಾಡಿರಲಿಲ್ಲ.
‘ವಿಧಾನಪರಿಷತ್ ಚುನಾವಣೆಯಲ್ಲಿ ಬಿಆರ್ಎಸ್ನ ಗೆಲುವು, ತೆಲಂಗಾಣ ರಾಜಕೀಯ ಚಿತ್ರಣದ ಬದಲಾವಣೆಯ ಮುನ್ಸೂಚನೆ’ ಎಂದು ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ ರಾಮ ರಾವ್ ಅವರು ತಿಳಿಸಿದ್ದಾರೆ.