ಭೋಪಾಲ್: ವಿವಾದತ್ಮಕ ಹೇಳಿಕೆಗಳ ಮೂಲಕ ದೇಶದಲ್ಲಿ ಸದ್ದು ಮಾಡಿದ್ದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿದೆ.
ಪ್ರಜ್ಞಾ ಸಿಂಗ್ ಠಾಕೂರ್ ಭೋಪಾಲ್ ಲೋಕಸಭೆ ಕ್ಷೇತ್ರದ ಸಂಸದೆಯಾಗಿದ್ದಾರೆ. ಈ ಸಲ ಅವರ ಬದಲಿಗೆ ಅಲೋಕ್ ಶರ್ಮಾ ಅವರಿಗೆ ಟಿಕೆಟ್ ನೀಡಲಾಗಿದೆ.
ಮತ್ತೊಂದು ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಮಧ್ಯಪ್ರದೇಶದಲ್ಲಿ 29 ಸ್ಥಾನಗಳ ಪೈಕಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಆರು ಮಂದಿ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇವರಲ್ಲಿ ಪ್ರಜ್ಞಾ ಸಿಂಗ್ ಠಾಕೂರ್ ಕೂಡ ಸೇರಿದ್ದಾರೆ. ಇಲ್ಲಿ 13 ಜನ ಹಾಲಿ ಸಂಸದರಿಗೆ ಟಿಕೆಟ್ ನೀಡಲಾಗಿದೆ.