ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ದಿನಾಚರಣೆ: ಮನೆಯಲ್ಲಿಯೇ ರಾಷ್ಟ್ರಧ್ವಜ ಹಾರಿಸಲು ಗೃಹ ಸಚಿವಾಲಯ ಸೂಚನೆ

Last Updated 24 ಜುಲೈ 2020, 12:10 IST
ಅಕ್ಷರ ಗಾತ್ರ

ನವದೆಹಲಿ: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕೊರೊನಾ ವಾರಿಯರ್ಸ್‌ಗಳಾದ ವೈದ್ಯರು, ಶುಶ್ರೂಷಕರು, ಪೌರಕಾರ್ಮಿಕರು ಮತ್ತು ಸೋಂಕಿನಿಂದ ಗುಣಮುಖರಾದವರನ್ನು ಆಹ್ವಾನಿಸಿ ಗೌರವಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ದೆಹಲಿಯ ಕೆಂಪುಕೋಟೆಯಲ್ಲಿ ನರೇಂದ್ರ ಮೋದಿ ತ್ರಿವರ್ಣ ಧ್ವಜ ಹಾರಿಸಲಿದ್ದು, ಅಂತೆಯೇ ರಾಜ್ಯ ರಾಜಧಾನಿಗಳು, ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲೂ ಕಾರ್ಯಕ್ರಮ ಎಂದಿನಂತೆ ಆಯೋಜಿಸಬೇಕು.ಸಂಭ್ರಮದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಜನರು ಭಾಗವಹಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸೋಂಕು ನಿವಾರಕ ಔಷಧ ಸಿಂಪಡಣೆ ಮತ್ತು ತಂತ್ರಜ್ಞಾನವನ್ನು ಹೆಚ್ಚು ಬಳಸಿಕೊಳ್ಳಬೇಕು ಎಂದು ಪತ್ರ ಬರೆದಿದೆ.

ಎಲ್ಲರೂ ಮನೆಯಲ್ಲಿಯೇ ಇದ್ದು, ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗಿಯಾಗಲು ಡಿಜಿಟಲ್‌ ಮಾಧ್ಯಮಗಳನ್ನು ಹೆಚ್ಚು ಬಳಸಿಕೊಂಡು ರಾಷ್ಟ್ರೀಯ ಭಾವೈಕ್ಯತೆ ಮತ್ತು ದೇಶಪ್ರೇಮವನ್ನು ಹೆಚ್ಚಿಸಲು ನಾವಿನ್ಯಪೂರ್ಣ ಕಾರ್ಯಕ್ರಮ ಆಯೋಜಿಸಬೇಕು. ಕಿಟಕಿ, ಬಾಲ್ಕನಿ ಮತ್ತು ಮಹಡಿಗಳಲ್ಲಿ ರಾಷ್ಟಧ್ವಜ ಹಿಡಿದು ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಬೇಕು ಎಂದೂ ಹೇಳಿದೆ.

ಕೋವಿಡ್‌–19ರ ವಿರುದ್ಧದ ಜನರ ಹೋರಾಟವನ್ನು ಸ್ಮರಿಸುವ ಮತ್ತು ಜನರಲ್ಲಿ ಒಗ್ಗಟ್ಟು ಮತ್ತು ಧೈರ್ಯವನ್ನು ಮೂಡಿಸುವಂತ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸೋಂಕಿನಿಂದ ಪಾರಾದ ಮತ್ತು ವೈದ್ಯರು, ಆರೋಗ್ಯ ಸೇವೆಗಳ ಸಿಬ್ಬಂದಿ ಮತ್ತು ಪೌರ ಕಾರ್ಮಿಕರನ್ನು ಗೌರವಿಸಬೇಕು ಎಂದು ಸಚಿವಾಲಯದ ಜಂಟಿ ಕಾರ್ಯದರ್ಶಿ ಅನೂಜ್‌ ಶರ್ಮ ಹೇಳಿದ್ದಾರೆ.

ಡಿಜಿಟಲ್‌ ವೇದಿಕೆಗಳ ಮೂಲಕ ಶಾಲಾ– ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್‌, ವೆಬಿನಾರ್‌, ದೇಶಭಕ್ತಿ ಗೀತೆಗಳ ಪ್ರಸ್ತುತಿ, ರಾಷ್ಟ್ರೀಯ ಸೇವಾ ಯೋಜನೆಯ (ಎನ್ಎಸ್ಎಸ್‌) ಕೆಲವು ವಿದ್ಯಾರ್ಥಿಗಳಿಂದ ಭಾಷಣ ಸ್ಪರ್ಧೆಗಳನ್ನು ಆಯೋಜಿಸಬೇಕು. ಪೊಲೀಸ್‌ ಮತ್ತು ಸೇನೆಯ ಬ್ಯಾಂಡ್‌ ಪ್ರದರ್ಶನವನ್ನು ಸಾರ್ವಜನಿಕ ಸ್ಥಳಗಳಲ್ಲಿ ದೊಡ್ಡ ಪರದೆಗಳ ಮೂಲಕ ಭಿತ್ತರಿಸಬೇಕು ಎಂದು ಹೇಳಿದೆ.

ರಾಷ್ಟ್ರಪತಿ ಭವನದಲ್ಲಿ ಪ್ರತಿ ವರ್ಷದಂತೆ ಕಾರ್ಯಕ್ರಮಗಳು ನಡೆಯಲಿವೆ. ಇದೇ ಮಾದರಿಯಲ್ಲಿ ರಾಜಭವನಗಳಲ್ಲೂ ಆಯೋಜಿಸುವುದನ್ನು ರಾಜ್ಯಪಾಲರು ನಿರ್ಧರಿಸಲಿದ್ದಾರೆ. ಕೆಂಪುಕೋಟೆಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT