ಜಮ್ಮು:ಪುಲ್ವಾಮಾ ದಾಳಿಯ ನಂತರ ಜಮ್ಮುವಿನಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ಬುಧವಾರ ಪೂರ್ಣಪ್ರಮಾಣದಲ್ಲಿ ಹಿಂಪಡೆಯಲಾಗಿದೆ.
ಉಗ್ರರ ದಾಳಿಯನ್ನು ಖಂಡಿಸಿ ಶುಕ್ರವಾರ ಪ್ರತಿಭಟನೆ ನಡೆಸುವ ವೇಳೆ ಜಮ್ಮುವಿನಲ್ಲಿ ಹಿಂಸಾಚಾರ ನಡೆದಿತ್ತು. ಆನಂತರ ಕರ್ಫ್ಯೂ ಹೇರಲಾಗಿತ್ತು ಮತ್ತು ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗಿತ್ತು. ಮಂಗಳವಾರ ನಗರದ ಕೆಲವು ಪ್ರದೇಶಗಳಲ್ಲಿ ಮಾತ್ರ ಕರ್ಫ್ಯೂ ಸಡಿಲಿಸಲಾಗಿತ್ತು.
ಈಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಹೀಗಾಗಿ ಕರ್ಫ್ಯೂ ತೆಗೆಯಲಾಗಿದೆ. ಆದರೆ ನಿಷೇದಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಮೂಲಗಳು ಹೇಳಿವೆ.
ಶಾಂತಿಗೆ ಭಂಗ: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ಕಣಿವೆ ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಮತ್ತು ಶಾಂತಿಗೆ ಭಂಗ ತರುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಐಜಿ ದಿಲ್ಬಾಗ್ ಸಿಂಗ್ ಬುಧವಾರ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಶಾಂತಿ ಮತ್ತು ಸುರಕ್ಷತೆ ಮೂಡಿಸಲು ಶಕ್ತಿಮೀರಿ ಪ್ರಯತ್ನಿಸುವಂತೆ ಅವರು ಪೊಲೀಸ್ ಸಿಬ್ಬಂದಿಗೆ ಕರೆ ನೀಡಿದರು.
ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಅವರು ಬುಧವಾರ ರಾಜ್ಯದಲ್ಲಿಯ ಸುರಕ್ಷತೆ ಮತ್ತು ಭದ್ರತೆಯನ್ನು ಅವಲೋಕಿಸಿದರು.