ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಥಾಪಿಸಲಾಗಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನ ಮಂತ್ರಿ ಎಚ್.ಡಿ ದೇವೇಗೌಡರನ್ನು ಆಹ್ವಾನಿಸದ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿಯ ನಡುವೆ ಮತ್ತೊಂದು ಸುತ್ತಿನ ವಾಗ್ವಾದ ನಡೆದಿದೆ.
ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸಲಾಗಿತ್ತು ಎಂದು ಬಿಜೆಪಿ ಹೇಳುತ್ತಿದ್ದರೆ, ಕಾಟಾಚಾರಕ್ಕೆ ಕರೆಯಲಾಗಿತ್ತು ಎಂದು ಜೆಡಿಎಸ್ ಆರೋಪಿಸುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ‘ಒಕ್ಕಲಿಗರ ಮತ ಧ್ರುವೀಕರಣದ ಭೀತಿಯಿಂದ ಕಂಗಾಲಾಗಿರುವ ಜೆಡಿಎಸ್ ಈಗ ಅಪಪ್ರಚಾರದ ಮೊರೆ ಹೋಗಿದೆ’ ಎಂದು ಹೇಳಿದೆ.
ಬಿಜೆಪಿ ಈ ವಾದಕ್ಕೆ ಇಂದು ಜೆಡಿಎಸ್ ಇಂದು ಪ್ರತಿಕ್ರಿಯೆ ನೀಡಿದೆ.
ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ಶ್ರೀ @H_D_Devegowda ರನ್ನು ಆಹ್ವಾನಿಸದೆ ರಾಜ್ಯ @BJP4Karnataka ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ.
— Janata Dal Secular (@JanataDal_S) November 13, 2022
ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ. 1/12#ಸುಳ್_ಬಿಜೆಪಿ #ಸುಳ್_ಸಿಎಂ
ಜೆಡಿಎಸ್ ಮಾಡಿರುವ ಟ್ವೀಟ್
ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಬಿಜೆಪಿ ಸರ್ಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ.
ಆಪರೇಷನ್ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ.
ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರ ಮೋದಿ ಅವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ?
ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೇ ʼಮಹಾ ಅಪರಾಧʼ ಎಂದು ಚಿತ್ರಿಸುತ್ತಿರುವ ಬಿಜೆಪಿಯ ವಿಕೃತಿ ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ.
ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಭಯ ಎನ್ನುವುದು ಹಾಗಿರಲಿ, ಪ್ರಧಾನಿಯ ನಾಮಬಲ ಒಂದಿಲ್ಲದಿದ್ದರೆ ನಿಮಗೆ ಠೇವಣಿಗೂ ಖಾತರಿ ಇಲ್ಲ. ಇನ್ನು 6 ತಿಂಗಳಲ್ಲಿ ಮೋದಿ ಅವರು ಎಷ್ಟು ಸಲ ಕರ್ನಾಟಕಕ್ಕೆ ಓಡೋಡಿ ಬರುತ್ತಾರೋ ನೋಡೋಣ. ಅಲ್ಲಿ ನಿಮ್ಮ ಯೋಗ್ಯತೆಯ ಅಳತೆ ಎಷ್ಟು? ಎಂಬುದು ಗೊತ್ತಾಗುತ್ತದೆ.
ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ. ʼಭೂತದ ಬಾಯಲ್ಲಿ ಭಗದ್ಗೀತೆʼ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ.
20 ದಿನಗಳ ಹಿಂದೆ ಸಚಿವ ಅಶ್ವತ್ಥ ನಾರಾಯಣ ಅವರು ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿ ಮೃತ್ತಿಕೆ ಸಂಗ್ರಹದ ಬಗ್ಗೆ ತಿಳಿಸಿ ಆಹ್ವಾನಿಸಿದ್ದರಷ್ಟೇ. ಆದರೆ,ಮುಖ್ಯಮಂತ್ರಿಗಳು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸಿದ್ದರು ಮತ್ತೂ ಆಹ್ವಾನ ಪತ್ರಿಕೆಯಲ್ಲೂ ದೇವೇಗೌಡರ ಹೆಸರನ್ನು ನಮೂದಿಸಲಾಗಿತ್ತೆಂದು ಹಸಿಸುಳ್ಳನ್ನೇ ಬಿಜೆಪಿ ಟ್ವೀಟಿಸಿದೆ.
ಬಿಜೆಪಿ ʼಗೊಬೆಲ್ ಸಂತತಿಯ ಶಿಶುʼ ಎನ್ನುವುದಕ್ಕೆ ಇದಕ್ಕಿಂತ ಸತ್ಯ ಸಾಕ್ಷ್ಯ ಬೇಕಾ? ʼಸುಳ್ ಬಿಜೆಪಿʼಗೆ ಸತ್ಯವೆಂದರೆ ಅಪಥ್ಯ. ಮುಖ್ಯಮಂತ್ರಿಗಳಾದ ಬೊಮ್ಮಾಯಿ ಅವರು ʼಸುಳ್ ಸಿಎಂʼ ಎಂದೇ ಪ್ರಖ್ಯಾತಿ ಆಗುತ್ತಿದ್ದಾರೆ.
ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ, ಸ್ವತಃ ಫೋನ್ ಕರೆ ಮೂಲಕ ದೇವೇಗೌಡರನ್ನು ಆಹ್ವಾನಿಸಿದ್ದಾರೆ ಎಂದು 'ಗೊಬೆಲ್ ಬಿಜೆಪಿ' ಟ್ವೀಟಿಸಿ ಸುಳ್ಳು ಹೇಳಿದೆ. ಸತ್ಯ ಏನೆಂಬುದನ್ನು ನಾವೂ ಟ್ವೀಟಿನಲ್ಲೇ ರಾಜ್ಯದ ಜನತೆಗೆ ನಿವೇದಿಸಿದ್ದೇವೆ. ಅದನ್ನು ಓದಲು ʼಗೊಬೆಲ್ ಬಿಜೆಪಿʼಗೆ ಗರ ಬಡಿದಿದೆಯಾ?
ನಾಡಪ್ರಭುಗಳ ವಿಚಾರದಲ್ಲೂ ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಹೇಳಿದೆ. ಅರ್ಧದಿನದ ಅರೆಬರೆ ಭೇಟಿಯಲ್ಲಿ ಘನವೇತ್ತ ಪ್ರಧಾನಿಗಳು ಮಾಡಿದ್ದಾದರೂ ಏನು? 'ಒಂದೇ ಕಲ್ಲಿನಲ್ಲಿ ನಾಲ್ಕು ಜಾತಿಗಳ ಮತಬುಟ್ಟಿಗೆ ಕೈ ಹಾಕಿದ ಪ್ರಧಾನಿ' / 'ಪ್ರತಿಮಾ ಪಥ, ಮೋದಿ ರಥ' ಎನ್ನುವ ಸುದ್ದಿಗಳನ್ನು
ಕಮಲಕ್ಕೆ ಕಾಮಾಲೆ ಕಣ್ಣು ಎನ್ನುವುದು ನಾಟಕವೋ, ಬೂಟಕವೋ? ಜಾತಿವಾರು ಮತಗಳ ಧ್ರುವೀಕರಣಕ್ಕೆ ಹೊರಟವರು ಯಾರು? ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದು ತಂದವರು ಯಾರು? ಸಂತ ಕನಕದಾಸರ ʼಕುಲ ಕುಲವೆಂದು ಹೊಡೆದಾಡದಿರಿ..ʼ ಪದವನ್ನು ಹೇಳುತ್ತಲೇ ʼಕುಲಕಿಚ್ಚಿನ ರಾಜಕೀಯʼ ಮಾಡಿದವರು ಯಾರು? ಅಂಗೈ ಹುಣ್ಣಿಗೆ ಕನ್ನಡಿ ಯಾಕೆ?
ಕೊನೆಯದಾಗಿ; ಸಂಸ್ಕಾರವೇ ಗೊತ್ತಿಲ್ಲದ ಪಕ್ಷಕ್ಕೆ ಶಿಷ್ಟಾಚಾರ ಮಾತೇಕೆ? ಅದು ತನಗಿಲ್ಲ ಎಂದು ಬಿಜೆಪಿ ಸಾಬೀತುಪಡಿಸಿದೆ. ಕನ್ನಡದ ಆಚಾರ-ವಿಚಾರಕ್ಕೆ ಕೊಡಲಿ ಪೆಟ್ಟು ಹಾಕುತ್ತಿರುವ ಆ ಪಕ್ಷ, ಕನ್ನಡನಾಡಿಗೆ ಬಹುದೊಡ್ಡ ಬೆದರಿಕೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.