ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇವಲ‌ ಒಂದು ಭಾಷೆಯನ್ನು ಮೆರೆಸುವ ಈ ಕೀಳು ಮಟ್ಟದ ರಾಜಕೀಯ ಏಕೆ?: ಜೆಡಿಎಸ್ ಪ್ರಶ್ನೆ

Last Updated 10 ಜನವರಿ 2023, 5:00 IST
ಅಕ್ಷರ ಗಾತ್ರ

ಬೆಂಗಳೂರು: ಇಂದು ಆಚರಣೆಯಾಗುತ್ತಿರುವ ‘ವಿಶ್ವ ಹಿಂದಿ ದಿನ’ಕ್ಕೆ ಜಾತ್ಯತೀತ ಜನತಾ ದಳ ಆಕ್ಷೇಪ ವ್ಯಕ್ತಪಡಿಸಿದೆ. ಕೇವಲ‌ ಒಂದು ಭಾಷೆಯನ್ನು ಮೆರೆಸುವ ಈ ಕೀಳು ಮಟ್ಟದ ರಾಜಕೀಯ ಏಕೆ? ಎಂದು ಬಿಜೆಪಿಯನ್ನು ಪ್ರಶ್ನೆ ಮಾಡಿದೆ.

ಪ್ರಪಂಚದಾದ್ಯಂತ ಹಿಂದಿ ಭಾಷೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಜನವರಿ 10 ರಂದು ವಿಶ್ವ ಹಿಂದಿ ದಿನ ಅಥವಾ ವಿಶ್ವ ಹಿಂದಿ ದಿವಸ್ ಅನ್ನು ಆಚರಿಸಲಾಗುತ್ತದೆ.

ಈ ಕುರಿತು ಟ್ವೀಟ್‌ ಮಾಡಿರುವ ಜೆಡಿಎಸ್‌, ‘ಒಕ್ಕೂಟ ಸರ್ಕಾರದ ಅಣತಿಯಂತೆ, ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ ರಾಜ್ಯ ಬಿಜೆಪಿಯವರೆ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ. ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವ ನಿಮ್ಮ ಬೆನ್ನುಮೂಳೆ' ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ’ ಎಂದು ಹೇಳಿದ್ದಾರೆ.

‘ಬಹು ಭಾಷೆಯ, ಬಹುಸಂಸ್ಕ್ರತಿಯ ದೇಶ ನಮ್ಮ ಭಾರತ. ಕೇವಲ‌ ಒಂದು ಭಾಷೆಯನ್ನು ಮೆರೆಸುವ ಈ ಕೀಳು ಮಟ್ಟದ ರಾಜಕೀಯ ಏಕೆ? ಒಂದು ಭಾಷೆಯ ವೈಭವೀಕರಣದಿಂದಾಗಿ ಭಾರತದ ಅನ್ಯ ಭಾಷೆಗಳ ಶ್ರೀಮಂತಿಕೆಯನ್ನು ಗೌಣವಾಗಿಸುವ ಈ ಹುನ್ನಾರಕ್ಕೆ ಕನ್ನಡಿಗರ ಪ್ರಬಲ ವಿರೋಧ’ ಎಂದು ತಿಳಿಸಿದೆ.

‘ನಮ್ಮ ದೇಶದ ಸಂವಿಧಾನದಲ್ಲಿ ರಾಷ್ಟ್ರಭಾಷೆಯೆಂಬ‌ ಪರಿಕಲ್ಪನೆಯೇ ಇಲ್ಲ. ಹಾಗಿದ್ದಾಗ, ಯಾವಾಗಿಂದ ಹಿಂದಿ ರಾಷ್ಟ್ರಭಾಷೆಯಾಯ್ತು? ಅಂತರರಾಷ್ಟ್ರೀಯ ಮಟ್ಟದಲ್ಲಿ ಹಿಂದಿಯನ್ನು ಈ ಪರಿ ವಿಜೃಂಭಿಸುವ ನಿಮ್ಮ ರಾಜಕೀಯವನ್ನು ಸ್ವಾಭಿಮಾನಿ‌ ಕನ್ನಡಿಗರು ಒಪ್ಪುವುದಿಲ್ಲ. ಇದಕ್ಕೆ ತಕ್ಕ‌ ಪ್ರತಿಫಲ ಉಣ್ಣುತ್ತೀರಿ’ ಎಂದು ಜೆಡಿಎಸ್‌ ಹೇಳಿದೆ.

‘ಹಿಂದಿ‌ ಭಾಷಿಕ‌ ಪ್ರದೇಶಗಳು ಕನ್ನಡವೂ ಸೇರಿದಂತೆ ಭಾರತದ ಭಿನ್ನ ಭಾಷೆಗಳ ದಿವಸವನ್ನು ಆಚರಿಸುತ್ತವೆಯೇ? ಕೇವಲ ಒಂದು ಭಾಷೆಗೆ ಈ ಮಟ್ಟದ ಆದ್ಯತೆ ಏಕೆ? ಕೇಂದ್ರ ಬಿಜೆಪಿಯ ತಾಳಕ್ಕೆ ಕುಣಿಯುವುದು ಬಿಟ್ಟು ಬೇರೇನೂ ಬಾರದ ರಾಜ್ಯ ಬಿಜೆಪಿಯವರೆ, ನಿಮ್ಮ ಅಭಿಮಾನ ಶೂನ್ಯ ನಡೆಯು ತಲೆತಗ್ಗಿಸುವಂತದ್ದು’ ಎಂದು ಟೀಕಿಸಿದೆ.

‘ನನ್ನ ಕನ್ನಡಕ್ಕಿಂತ ಯಾರೂ ದೊಡ್ಡವರಲ್ಲ’ ಎಂದ ಕುವೆಂಪು ಅವರ ಕನ್ನಡಾಭಿಮಾನ ನಮ್ಮದೂ ಕೂಡ. ಭಾರತದ ಅಸಂಖ್ಯ ಶ್ರೀಮಂತ ಭಾಷೆಗಳಲ್ಲಿ ಹಿಂದಿಯೂ ಒಂದು. ಅದರ ಹೊರತಾಗಿ, ಹಿಂದಿ ಹೇರಿಕೆ, ವೈಭವೀಕರಣದ ಯಾವುದೇ ಕುತಂತ್ರದ ರಾಜಕೀಯಕ್ಕೆ ಧಿಕ್ಕಾರವೇ ಸೈ’ ಎಂದು ಗುಡುಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT